ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ) ನಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮಾಜಿ ಕಾರ್ಯನಿರ್ವಾಹಕ ಎಂಜಿನಿಯರ್ ಝರಣಪ್ಪ ಎಂ. ಚಿಂಚೋಳಿಕರ್ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇಲಾಖೆಯ ಗ್ರೂಪ್ ಲೀಡರ್ ದೇವರಾಜ ರೇಷ್ಮೆ ಅವರನ್ನೂ ವಶಕ್ಕೆ ಪಡೆದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣದ ತನಿಖೆಯನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಲೋಕಾಯುಕ್ತ ಡಿವೈಎಸ್‌ಪಿ ಮಲ್ಲಿಕಾರ್ಜುನ ಚುಕ್ಕಿ ನೇತೃತ್ವದ ತಂಡ ಬೆಂಗಳೂರು ಹಾಗೂ ಕಲಬುರಗಿ ಜಿಲ್ಲೆಯ ಅಧಿಕಾರಿಗಳ ಸಹಕಾರದೊಂದಿಗೆ ಬಂಧನ ಕಾರ್ಯಾಚರಣೆ ನಡೆಸಿತು. ಬಂಧನದ ಬಳಿಕ ಇಬ್ಬರಿಗೂ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ಝರಣಪ್ಪ ಚಿಂಚೋಳಿಕರ್, ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ 2016ರಿಂದ 2018ರ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದ್ದರು. ತನಿಖೆಯಲ್ಲಿ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ವರ್ಷಗಳ ಹಿಂದೆ ಅವರನ್ನು ಅಮಾನತುಗೊಳಿಸಲಾಗಿತ್ತು. ನಂತರ ಸೇವೆಯಿಂದಲೂ ವಜಾಗೊಳಿಸಲಾಗಿತ್ತು.

ಮಾಜಿ ಸಚಿವ ಹಾಲಪ್ಪ ಆಚಾರ್ ಅವರು 2020ರಲ್ಲಿ ನೀಡಿದ್ದ ದೂರಿನ ಮೇರೆಗೆ, ಸುವರ್ಣ ಗ್ರಾಮ ಯೋಜನೆಯ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಿಸದೇ ಸರ್ಕಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ತನಿಖೆ ಆರಂಭವಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್‌ಗಳ ಸಮಿತಿಯಿಂದ ಸ್ಥಳ ಪರಿಶೀಲನೆ ಮತ್ತು ಪಂಚನಾಮೆ ನಡೆಸಲಾಗಿತ್ತು.

ಇದಕ್ಕೂ ಮುನ್ನ ಝರಣಪ್ಪ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಆ ಪ್ರಕರಣ ಸೇರಿದಂತೆ ಕೆಆರ್‌ಐಡಿಎಲ್‌ನಲ್ಲಿ ನಡೆದಿರುವ ಅಂದಾಜು ₹72 ಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.

Related News

error: Content is protected !!