ಚಿಂಚೋಳಿ ತಾಲ್ಲೂಕಿನ ಗಂಜಗೇರಾ–ವಜೀರಗಾಂವ ಸಂಪರ್ಕ ರಸ್ತೆಯ ದುಸ್ಥಿತಿ ಜನರನ್ನು ಕಂಗೆಡಿಸಿದೆ. ರಸ್ತೆ ಸಂಪೂರ್ಣವಾಗಿ ಹದಗೆಟ್ಟು, ದೊಡ್ಡ ದೊಡ್ಡ ಗುಂಡಿಗಳಿಂದ ತುಂಬಿಕೊಂಡಿರುವುದರಿಂದ ಸಂಚಾರವು ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸ್ಥಳೀಯರು ತಕ್ಷಣ ರಸ್ತೆ ದುರಸ್ತಿ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಈ ಮಾರ್ಗದಲ್ಲಿ ಆಳವಾದ ಗುಂಡಿಗಳು ಉಂಟಾಗಿರುವುದರಿಂದ ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆಗಿ ಬಿದ್ದು ಗಾಯಗೊಳ್ಳುತ್ತಿರುವ ಘಟನೆಗಳು ಹೆಚ್ಚಾಗಿವೆ. ವಿಶೇಷವಾಗಿ ರಾತ್ರಿ ವೇಳೆ ಈ ರಸ್ತೆಯಲ್ಲಿ ಸಂಚರಿಸುವುದು ಜೀವಪಣಕ್ಕಿಟ್ಟು ಹೋಗುವಂತಾಗಿದೆ. ಈಗಾಗಲೇ ಹಲವರು ಅಪಘಾತಕ್ಕೀಡಾಗಿ ಗಾಯಗೊಂಡಿರುವ ಉದಾಹರಣೆಗಳೂ ಕಂಡುಬಂದಿವೆ.
ನಿತ್ಯ ಈ ರಸ್ತೆಯನ್ನು ಬಳಸುವ ವಾಹನ ಸವಾರರು ಮತ್ತು ಪಾದಚಾರಿಗಳು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಹದಗೆಟ್ಟ ರಸ್ತೆಗಳನ್ನು ಕಂಡು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ರಸ್ತೆ ದುರಸ್ತಿಗೆ ಜವಾಬ್ದಾರಿಯಾಗಿರುವ ಲೋಕೋಪಯೋಗಿ ಇಲಾಖೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಕಾಲಮಿತಿಯಲ್ಲಿ ರಸ್ತೆಗಳನ್ನು ಸುಧಾರಿಸಬೇಕಿದ್ದರೂ, ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಸ್ಥಳೀಯರು ಆಕ್ಷೇಪಿಸಿದ್ದಾರೆ.
ರಸ್ತೆಯ ದುಸ್ಥಿತಿ ದಿನೇದಿನೇ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಗಮನಹರಿಸಿ ದುರಸ್ತಿ ಕಾರ್ಯ ಆರಂಭಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
