ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ನಡೆದ ಹಲ್ಲೆ ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ಕಾಂಗ್ರೆಸ್ ಸದಸ್ಯ ಕುಬೇರ್ ದಾಳಿ ನಡೆಸಿದ ಆರೋಪ ಎದುರಿಸುತ್ತಿರುವ ಪಾಲಿಕೆ ಇಂಜಿನಿಯರ್ ವೀರೇಶ್ ವಿರುದ್ಧವೇ ಅಟ್ರಾಸಿಟಿ ಪ್ರಕರಣ ದಾಖಲಾಗಿರುವುದು ಚರ್ಚೆಗೆ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ಮಹಾನಗರ ಪಾಲಿಕೆ ಇಂಜಿನಿಯರ್ ವೀರೇಶ್ ಮೇಲೆ ಕಾಂಗ್ರೆಸ್ ಸದಸ್ಯ ಕುಬೇರ್ ಹಲ್ಲೆ ನಡೆಸಿದ್ದರು. ಈ ಸಂಬಂಧ ವೀರೇಶ್ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ ಹಾಗೂ ಹಲ್ಲೆ ಪ್ರಕರಣದಡಿ ಕುಬೇರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆದರೆ, ಪ್ರಕರಣ ಇದಲ್ಲೇ ನಿಂತಿಲ್ಲ. ಮಹಾನಗರ ಪಾಲಿಕೆ ಮೇಯರ್ ಗಾದೆಪ್ಪ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ರಾಯಲ್ ವೃತ್ತದಿಂದ ಬ್ರೂಸ್ ಪೇಟೆ ಠಾಣೆಯವರೆಗೆ ಪಾದಯಾತ್ರೆ ನಡೆಸಿ, ವೀರೇಶ್ ವಿರುದ್ಧವೇ ದೂರು ನೀಡಿದ್ದಾರೆ.

ಈ ವೇಳೆ ಕಾಂಗ್ರೆಸ್ ಮುಖಂಡರು ಮಾತನಾಡಿ, “ನಮ್ಮ ಕಾರ್ಯಕರ್ತನಿಗೆ ಇಂಜಿನಿಯರ್ ವೀರೇಶ್ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇದರಿಂದ, ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ ತಗುಲಿದ್ದು, ಎರಡೂ ಪಾಳಯಗಳಿಂದ ಪರಸ್ಪರ ದೂರು-ಪ್ರತಿದೂರುಗಳು ದಾಖಲಾಗಿವೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related News

error: Content is protected !!