ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24 ವರ್ಷದ ಶಂಕ್ರಮ್ಮ ಕೆರಿಮತ್ತಿಹಳ್ಳಿ ಎಂಬ ಯುವತಿ ಕಾಣೆಯಾಗಿದ್ದು, ಕುಟುಂಬದವರು ಅಪಹರಣ ಶಂಕೆ ವ್ಯಕ್ತಪಡಿಸಿದ್ದಾರೆ.
ಪೋಷಕರ ಮಾಹಿತಿ ಪ್ರಕಾರ, ನರೇಗಲ್ ಗ್ರಾಮದ ಇಬ್ರಾಹಿಂ ನೆಗಳೂರು ಎಂಬ ವ್ಯಕ್ತಿ ನಿನ್ನೆ ರಾತ್ರಿ ಮನೆ ಹಿಂಬದಿ ದ್ವಾರದಿಂದ ಬಂದು ಯುವತಿಯನ್ನು ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಪರಿಚಯವನ್ನು ಬಳಸಿಕೊಂಡು ಪುಸಲಾಯಿಸಿ ಕರೆದುಕೊಂಡು ಹೋಗಿರುವ ಸಾಧ್ಯತೆ ಇದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಬಿ.ಕಾಂ ಪದವಿ ಪಡೆದಿದ್ದ ಶಂಕ್ರಮ್ಮ ಅಕ್ಕಿಆಲೂರಿನಲ್ಲಿ ಉದ್ಯೋಗದಲ್ಲಿದ್ದು, ಇಂದು ನಿಶ್ಚಿತಾರ್ಥ ಮತ್ತು ಮೇ 11ರಂದು ಮದುವೆ ನಿಗದಿಯಾಗಿತ್ತು. ಆದರೆ ನಿಶ್ಚಿತಾರ್ಥಕ್ಕೂ ಮುನ್ನವೇ ಯುವತಿ ನಾಪತ್ತೆಯಾಗಿರುವುದು ಕುಟುಂಬದ ಆತಂಕವನ್ನು ಹೆಚ್ಚಿಸಿದೆ.
ಈ ಘಟನೆಗೆ ಸಂಬಂಧಿಸಿ ಕೆಲವು ಸಂಘಟನೆಗಳು ವಿವಿಧ ಶಂಕೆಗಳನ್ನು ವ್ಯಕ್ತಪಡಿಸಿ ಆಕ್ರೋಶ ವ್ಯಕ್ತಪಡಿಸಿದ್ದರೂ, ಪೊಲೀಸ್ ಅಧಿಕಾರಿಗಳು ಯಾವುದೇ ನಿರ್ಧಾರಕ್ಕೆ ಬರಲು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಅಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕುಟುಂಬದವರು ತಮ್ಮ ಮಗಳನ್ನು ಸುರಕ್ಷಿತವಾಗಿ ಮರಳಿ ತರುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
