ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ಮೂಡಿಸುವ ಘಟನೆ ಬೆಳಕಿಗೆ ಬಂದಿದ್ದು, ಆಡುಗೋಡಿ ಪ್ರದೇಶದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಆತಂಕ ಮೂಡಿಸಿದೆ. 34 ವರ್ಷದ ಪೂಜಾ ದತ್ತ ಮೃತ ಯುವತಿಯಾಗಿದ್ದು, ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕಳೆದ ಗುರುವಾರ ಪೂಜಾ ಅವರು ದಿನಸಿ ತರಲು ಮನೆಯಿಂದ ಹೊರಗೆ ಬಂದಿದ್ದೇ ಕೊನೆಯ ಬಾರಿ ಇತರರ ಕಣ್ಣಿಗೆ ಕಾಣಿಸಿಕೊಂಡಿದ್ದರು. ಅದಾದ ನಂತರ ಆಕೆ ಹೊರಗೆ ಕಾಣಿಸಿಕೊಂಡಿರಲಿಲ್ಲ. ಏಪ್ರಿಲ್ 27ರ ಶನಿವಾರ ಸಂಜೆ ವೇಳೆ ಆಕೆ ವಾಸಿಸುತ್ತಿದ್ದ ಮನೆಯಿಂದ ದುರ್ವಾಸನೆ ಬರಲು ಆರಂಭವಾಗಿತ್ತು. ಇದರಿಂದ ಗಾಬರಿಗೊಂಡ ಪಕ್ಕದ ಮನೆಯವರು ತಕ್ಷಣ ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರ ಸಮ್ಮುಖದಲ್ಲಿ ಮನೆಯ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಕಂಡ ದೃಶ್ಯ ಬೆಚ್ಚಿಬೀಳಿಸುವಂತಿತ್ತು. ಪೂಜಾ ಅವರ ಮೃತದೇಹ ನಗ್ನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಮನೆಯಲ್ಲಿ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿದ್ದವು. ಅಷ್ಟೆಲ್ಲ ನಡೆದಿದ್ದರೂ ಮನೆಯ ಫ್ಯಾನ್ ಮಾತ್ರ ಚಲಿಸುತ್ತಿದ್ದುದೇ ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಮೂಲತಃ ಜಾರ್ಖಾಂಡ್ನ ಧನಬಾದ್ ಸಮೀಪದ ಹಿರಾಪುರ ನಿವಾಸಿಯಾಗಿದ್ದ ಪೂಜಾ ದತ್ತ ಕಳೆದ ಮೂರು ವರ್ಷಗಳಿಂದ ಆಡುಗೋಡಿಯ ಮುನಿಕೃಷ್ಣಪ್ಪ ಲೇಔಟ್ನಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಅವರು ನಗರದ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.
ಈ ಕುರಿತು ಮಾತನಾಡಿರುವ ಮನೆ ಮಾಲೀಕ ಜಾನಕಮ್ಮ ಅವರು ಕೆಲವು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಪೂಜಾ ಹೆಚ್ಚಾಗಿ ಹಿಂದಿಯಲ್ಲೇ ಮಾತನಾಡುತ್ತಿದ್ದು, ಒಂಟಿಯಾಗಿಯೇ ವಾಸಿಸುತ್ತಿದ್ದರು. ಆದರೆ ಒಬ್ಬ ಯುವಕ ಆಗಾಗ ಮನೆಗೆ ಭೇಟಿ ನೀಡುತ್ತಿದ್ದನು. ಆ ಯುವಕ ಬಂದಾಗಲೆಲ್ಲ ಪೂಜಾ ಜೊತೆ ಜಗಳವಾಡುತ್ತಿದ್ದನೆಂದು ಅವರು ಹೇಳಿದ್ದಾರೆ. ಈ ಜಗಳದ ಹಿಂದಿನ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಸದ್ಯ ಆಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು, ಆಕೆಯನ್ನು ಭೇಟಿ ಮಾಡುತ್ತಿದ್ದ ಆ ಯುವಕ ಯಾರು ಎಂಬುದನ್ನು ಪತ್ತೆಹಚ್ಚಲು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ನಗರದಲ್ಲಿ ಮಹಿಳೆಯರ ಭದ್ರತೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎತ್ತಿದೆ.
