ಹಾವೇರಿ: ಬೆಂಗಳೂರಿನಿಂದ ಗದಗದತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಭೀಕರವಾಗಿ ಹೊತ್ತಿ ಉರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಎಲ್ಲ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಯಾಣದ ಮಧ್ಯೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಗಂಭೀರವಾಗುತ್ತಿರುವುದನ್ನು ಗಮನಿಸಿದ ಚಾಲಕ ಪಕ್ಕೀರಪ್ಪ ತಕ್ಷಣವೇ ಬಸ್ ನಿಲ್ಲಿಸಿ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಬಳಿಕ ಅವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರೂ, ಕೆಲವೇ ಕ್ಷಣಗಳಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗಿ ಇಡೀ ಬಸ್‌ನ್ನು ಆವರಿಸಿಕೊಂಡಿದೆ.

ನೋಡುತ್ತಲೇ ಪಲ್ಲಕ್ಕಿ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ವಾಹನ ಸಂಪೂರ್ಣ ನಾಶವಾಗಿದೆ. ಘಟನೆ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಹೆದ್ದಾರಿಯಲ್ಲಿ ಉಂಟಾದ ಟ್ರಾಫಿಕ್‌ನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.

ಬಸ್‌ಗೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Related News

error: Content is protected !!