ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಧಿಕೃತವಾಗಿ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಗೆ ಹಸಿರು ನಿಶಾನೆ ತೋರಲಾಗಿದ್ದು, ಒಟ್ಟು 100 ಕೋಟಿ ರೂಪಾಯಿಗಳ ಅಂದಾಜು ಮೊತ್ತದ ಅನುದಾನವನ್ನು ಮೀಸಲಿಡಲಾಗಿದೆ.

ಬಜೆಟ್ ಘೋಷಣೆ ಈಗ ಅನುಷ್ಠಾನದತ್ತ:
ರಾಜ್ಯ ಸರ್ಕಾರವು ತನ್ನ ಬಜೆಟ್‌ನಲ್ಲಿ ಕಾರವಾರದಲ್ಲಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು 100 ಕೋಟಿ ರೂಪಾಯಿ ಅನುದಾನವನ್ನು ಪ್ರಕಟಿಸಿತ್ತು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಆಡಳಿತಾತ್ಮಕ ಒಪ್ಪಿಗೆ ಸಿಕ್ಕಿರುವುದರಿಂದ ಕಟ್ಟಡ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಜನರಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸ್ಥಳೀಯವಾಗಿಯೇ ದೊರೆಯಲಿವೆ.

ಇಲ್ಲಿಯವರೆಗೆ ಜಿಲ್ಲೆಯಲ್ಲಿ ತುರ್ತು ಮತ್ತು ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾದಾಗ ಉಡುಪಿ, ಮಂಗಳೂರು, ಹುಬ್ಬಳ್ಳಿ ಅಥವಾ ಗೋವಾ ರಾಜ್ಯದ ಆಸ್ಪತ್ರೆಗಳಿಗೆ ರೋಗಿಗಳನ್ನು ಸಾಗಿಸಬೇಕಾಗಿತ್ತು. ಸಕಾಲಕ್ಕೆ ಚಿಕಿತ್ಸೆ ಸಿಗದೆ ದಾರಿಯಲ್ಲೇ ಪ್ರಾಣ ಕಳೆದುಕೊಂಡ ಅನೇಕ ಘಟನೆಗಳು ಜಿಲ್ಲೆಯಲ್ಲಿ ಸಂಭವಿಸಿದ್ದವು. ಈ ನೂತನ 200 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ನಿರ್ಮಾಣದಿಂದಾಗಿ ಇನ್ಮುಂದೆ ಕರಾವಳಿ ಭಾಗದ ಜನರಿಗೆ ಗುಣಮಟ್ಟದ ಚಿಕಿತ್ಸೆ ಸಕಾಲದಲ್ಲಿ ಸಿಗುವಂತಾಗಲಿ.

Related News

error: Content is protected !!