ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಮದ್ಯದ ಅಮಲಿನಲ್ಲಿದ್ದ ರೌಡಿಶೀಟರ್‌ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ, ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಪಿ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ.

ಸ್ಥಳೀಯ ಮೂಲಗಳ ಪ್ರಕಾರ, ‘ಮಚ್‌ ಮಂಜ’ ಎಂದು ಪರಿಚಿತನಾಗಿರುವ ರೌಡಿಶೀಟರ್‌ ಮೌರ್ಯ ಹೋಟೆಲ್‌ ಸಮೀಪ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ. ಬಳಿಕ ಹೋಟೆಲ್‌ ಎದುರಿನ ಬೀಡಾ ಅಂಗಡಿ ಬಳಿ ರಾಘವೇಂದ್ರ ದತ್ತಾ ಬಾಂದೇಕರ್‌ ಹಾಗೂ ಮಂಜುನಾಥ್‌ ಸುಬ್ರಾಯ ಅವರೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಗಲಾಟೆಯನ್ನು ತಡೆಯಲು ಮುಂದಾದ ಹೋಟೆಲ್‌ ಸಿಬ್ಬಂದಿ ಸದಾಶಿವ ಪೂಜಾರಿ ಅವರ ಮೇಲೂ ಆರೋಪಿ ಹಲ್ಲೆ ನಡೆಸಿದ್ದರಿಂದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಲು ಯತ್ನಿಸಿದರೂ, ಮದ್ಯದ ಅಮಲಿನಲ್ಲಿದ್ದ ಆರೋಪಿ ಪೊಲೀಸರ ಮಾತನ್ನು ಲೆಕ್ಕಿಸದೇ ಉದ್ಧಟತನ ಪ್ರದರ್ಶಿಸಿದ್ದಾನೆ. ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿ, ಗುದ್ದಾಟಕ್ಕೆ ಇಳಿದಿದ್ದಾನೆ.

ಇದರಲ್ಲೂ ತೃಪ್ತನಾಗದ ಆತ, ತನ್ನ ಬಟ್ಟೆಗಳನ್ನು ಕಳಚಿಕೊಂಡು ಅಸಭ್ಯವಾಗಿ ವರ್ತಿಸಿದ್ದು, ಪೊಲೀಸ್ ಸಿಬ್ಬಂದಿಗಳಾದ ಅಶೋಕ ಹಾಗೂ ಹನುಮಂತ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಅಲ್ಲದೆ, ಪೊಲೀಸ್ ವಾಹನದ ಮುಂದೆ ಮಲಗಿ ಕಾರ್ಯಾಚರಣೆಗೆ ಅಡ್ಡಿಪಡಿಸಿ ಸಾಕಷ್ಟು ಹೊತ್ತು ಹೈಡ್ರಾಮಾ ನಡೆಸಿದ್ದಾನೆ.

ಕೊನೆಗೆ ಪೊಲೀಸರು ಹರಸಾಹಸ ಪಟ್ಟು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಪುಂಡಾಟ ಮೆರೆದಿರುವುದು ಹಾಗೂ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Related News

error: Content is protected !!