ಬೆಳಗಾವಿ: ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತ್ನಿ ಸೇರಿದಂತೆ ಒಟ್ಟು 10 ಮಂದಿಯನ್ನು ಬಂಧಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಅಪಘಾತಕ್ಕೊಳಗಾದ ಸಂದೀಪ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಮೃತಪಟ್ಟಿದ್ದರು. ಆರಂಭದಲ್ಲಿ ಇದನ್ನು ಸಹಜ ಸಾವು ಎಂದು ಪರಿಗಣಿಸಲಾಗಿತ್ತು. ಆದರೆ ಮೃತರ ಕುಟುಂಬಸ್ಥರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಮರು ತನಿಖೆ ಆರಂಭಿಸಿದರು.
ತನಿಖೆಯ ವೇಳೆ ಸಂದೀಪ್ ಅವರ ಪತ್ನಿ ಸುಮಾ ಮಂಜರಗಿ ಹಾಗೂ ಪುಂಡಲೀಕ ಎಂಬ ವ್ಯಕ್ತಿಯ ನಡುವಿನ ಆಪ್ತ ಸಂಬಂಧದ ಮಾಹಿತಿ ಬಹಿರಂಗವಾಗಿದೆ ಎನ್ನಲಾಗಿದೆ. ಇದೇ ವೇಳೆ ಸಂದೀಪ್ ಅವರ ಸಾವಿಗೆ ಸಂಚು ರೂಪಿಸಲಾಗಿದೆ ಎಂಬ ಶಂಕೆಯೂ ವ್ಯಕ್ತವಾಗಿದೆ.
ಪ್ರಕರಣದ ತನಿಖೆ ಮುಂದುವರಿದಂತೆ ಆಸ್ಪತ್ರೆಯ ಕೆಲ ಸಿಬ್ಬಂದಿ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ಪಾತ್ರವೂ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ವರದಿಯಲ್ಲಿ ಅಕ್ರಮ ನಡೆದಿರುವ ಆರೋಪಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಇದಲ್ಲದೆ, ಸಂದೀಪ್ ಅವರ ಸಾವಿನ ನಂತರ ವಿಮಾ ಕಂಪನಿಯಿಂದ ಬಿಡುಗಡೆಯಾದ ಕೋಟ್ಯಂತರ ರೂಪಾಯಿ ಹಣದ ವ್ಯವಹಾರಗಳ ಮೇಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರ್ಥಿಕ ವ್ಯವಹಾರಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ.
ಮೃತರ ಸಹೋದರ ನೀಡಿದ ದೂರಿನ ಮೇರೆಗೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹಲವು ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಇನ್ನಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ.
