ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ, ನಿವೃತ್ತ ಬಿಎಂಟಿಸಿ ಕಂಡಕ್ಟರ್ ಗಾಯಗೊಂಡ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ನಿನ್ನೆ ಸಂಜೆ ಕ್ಯಾಬ್ನಲ್ಲಿ ಬಂದಿದ್ದ ಇಬ್ಬರು ಯುವಕರು ಖಾಸಗಿ ಜಾಗಕ್ಕೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಜಮೀನಿನ ಮಾಲೀಕ ರಾಮಚಂದ್ರ ಅವರೊಂದಿಗೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡು, ರಾಮಚಂದ್ರ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆ ಬಳಿಕ ಆರೋಪಿಗಳು ಕ್ಯಾಬ್ನಲ್ಲಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಟ್ರಾಫಿಕ್ ಜಾಮ್ನಿಂದ ವಾಹನ ಸಿಲುಕಿದ ಕಾರಣ ಸಮೀಪದ ಬೇಕರಿಗೆ ನುಗ್ಗಿದ್ದಾರೆ ಎನ್ನಲಾಗಿದೆ. ಈ ವೇಳೆ ಕೈಯಲ್ಲಿದ್ದ ಬಾಟಲಿಯಿಂದ ಅಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ ಪರಿಣಾಮ ಹರೀಶ್, ಶಿವ ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಸ್ಥಳೀಯರು ಆರೋಪಿಗಳನ್ನು ಬೇಕರಿಯೊಳಗೆ ತಡೆದು ಇಟ್ಟು, ಬಳಿಕ ಪರಪ್ಪನ ಅಗ್ರಹಾರ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳ ಬ್ಯಾಗ್ನಲ್ಲಿ ಕೆಲವು ಸಣ್ಣ ಪ್ಯಾಕೆಟ್ಗಳು ಪತ್ತೆಯಾಗಿದ್ದು, ಅವು ಮಾದಕ ವಸ್ತುಗಳೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗಾಯಗೊಂಡಿರುವ ರಾಮಚಂದ್ರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಹಿನ್ನೆಲೆ ಹಾಗೂ ದಾಳಿಯ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.
