ಬೆಂಗಳೂರು: ನಗರದ ಜೆ.ಪಿ. ನಗರದಲ್ಲಿ ಭಾನುವಾರ ಸಂಜೆ ರೌಡಿಶೀಟರ್ ರಾಜುಬಾಯ್ ಎಂಬಾತನನ್ನು ದುಷ್ಕರ್ಮಿಗಳ ಗುಂಪೊಂದು ಸಾರ್ವಜನಿಕರ ಕಣ್ಣೆದುರೇ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆತಂಕ ಸೃಷ್ಟಿಸಿದೆ.

ಪ್ರಗತಿಪುರ ನಿವಾಸಿಯಾಗಿದ್ದ ರಾಜುಬಾಯ್ ಮೇಲೆ ಸಂಜೆ ಸುಮಾರು 5.30ರ ವೇಳೆಗೆ ಐಜಿ ಸರ್ಕಲ್ ಸಮೀಪ ದಾಳಿ ನಡೆದಿದೆ. ಟೀ ಕುಡಿದು ಹಿಂದಿರುಗುತ್ತಿದ್ದ ವೇಳೆ ಹೊಂಚು ಹಾಕಿ ಕುಳಿತಿದ್ದ ನಾಲ್ಕೈದು ಮಂದಿ ದುಷ್ಕರ್ಮಿಗಳು ಏಕಾಏಕಿ ಲಾಂಗ್ ಹಾಗೂ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಜೆ ವೇಳೆ ರಸ್ತೆಯಲ್ಲಿ ವಾಹನಗಳ ಸಂಚಾರ ಮತ್ತು ಜನರ ಓಡಾಟ ಹೆಚ್ಚಿದ್ದರೂ, ದುಷ್ಕರ್ಮಿಗಳು ಯಾವುದೇ ಭಯವಿಲ್ಲದೆ ರಾಜುಬಾಯ್‌ನನ್ನು ಅಟ್ಟಾಡಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ನಡೆದ ಕ್ಷಣಗಳಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದೃಶ್ಯ ಕಂಡ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.

ಮೃತ ರಾಜುಬಾಯ್ ಸುಮಾರು ಹತ್ತು ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಳೆಯ ವೈಷಮ್ಯವೇ ಈ ಹತ್ಯೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಜೆ.ಪಿ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಗಳ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Related News

error: Content is protected !!