ಲೋಕೋಪಯೋಗಿ ಇಲಾಖೆ (PWD) ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಎಂದು ಹೇಳಿಕೊಂಡು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ನಡೆಸಿರುವ ಆರೋಪ ಕೇಳಿಬಂದಿದೆ. ರಾಯಚೂರು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ (ಇಇ) ವೆಂಕಟೇಶ್ ಗಲಗ ವಿರುದ್ಧ ₹3.48 ಕೋಟಿ ಅಕ್ರಮ ಹಣ ವರ್ಗಾವಣೆ ಸಂಬಂಧ ಗಂಭೀರ ಆರೋಪಗಳು ಕೇಳಿಬಂದಿವೆ.

ಮಸ್ಕಿ–ಲಿಂಗಸುಗೂರು ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳು ಹಾಗೂ ನಕಲಿ ಟೆಂಡರ್ ಸೃಷ್ಟಿಸಿ ₹3 ಕೋಟಿ 48 ಲಕ್ಷ ಹಣವನ್ನು ಅಕ್ರಮವಾಗಿ ಬಿಡುಗಡೆ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಆದರೆ, ಈ ಆರೋಪಗಳನ್ನು ಇಇ ವೆಂಕಟೇಶ್ ಗಲಗ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

ಮೂಲತಃ ಈ ರಸ್ತೆ ಕಾಮಗಾರಿಯ ಟೆಂಡರ್ ಅಮ್ಮಾಪುರ ಆ್ಯಂಡ್ ಕಂಪನಿಗೆ ಅಧಿಕೃತವಾಗಿ ಮಂಜೂರಾಗಿತ್ತು. ಆದರೆ, ಕಾಮಗಾರಿ ನಡೆಯುತ್ತಿದ್ದ ವೇಳೆ ಭೀಮಾಶಂಕರ ದೋರನಹಳ್ಳಿ ಎಂಬ ಹೆಸರಿನಲ್ಲಿ ಮತ್ತೊಂದು ನಕಲಿ ಟೆಂಡರ್ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.

ಈ ಪ್ರಕರಣದ ಕುರಿತು ರಾಜ್ಯಪಾಲರು ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಈಗಾಗಲೇ ಅಧಿಕೃತ ದೂರು ಸಲ್ಲಿಸಲಾಗಿದ್ದು, ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.

Related News

error: Content is protected !!