ಬಾಗಲಕೋಟೆ: ಹೊಸ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದ ಎಎಸ್‌ಐ ಒಬ್ಬರು ಮಾರ್ಗಮಧ್ಯೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದ ನಿವಾಸಿ ಅಲ್ಲಾಭಕ್ಷ ಕರೋಶಿ (54) ಮೃತಪಟ್ಟ ಪೊಲೀಸ್ ಅಧಿಕಾರಿ. ಅವರು ಈ ಹಿಂದೆ ಬೀಳಗಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಇತ್ತೀಚೆಗೆ ಬಾಗಲಕೋಟೆ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು.

ಬುಧವಾರ ಹೊಸ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಹಿನ್ನೆಲೆಯಲ್ಲಿ ತಮ್ಮ ಮನೆಯಿಂದ ಬಾಗಲಕೋಟೆ ನಗರಕ್ಕೆ ಹೊರಟಿದ್ದರು. ಆದರೆ ಮಾರ್ಗಮಧ್ಯೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರು ಅಸ್ವಸ್ಥಗೊಂಡಿದ್ದಾರೆ.

ಕುಟುಂಬಸ್ಥರು ಮತ್ತು ಸ್ಥಳೀಯರು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರು. ಆದರೆ ಆಸ್ಪತ್ರೆಗೆ ಸಾಗಿಸುವಾಗಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಸುದ್ದಿ ತಿಳಿದ ಕೂಡಲೇ ಮಾಜಿ ಸಚಿವ ಹಾಗೂ ಶಾಸಕ ಆರ್.ಬಿ. ತಿಮ್ಮಾಪುರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಮೃತ ಎಎಸ್‌ಐ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ದುಃಖ ಹಂಚಿಕೊಂಡರು.

ನಿಷ್ಠಾವಂತ ಪೊಲೀಸ್ ಅಧಿಕಾರಿಯ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆ ಹಾಗೂ ಸಹೋದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Related News

error: Content is protected !!