ನೀರು ಮತ್ತು ಒಳಚರಂಡಿ ಕಾಮಗಾರಿಯ ಎಸ್ಟಿಮೇಟ್ಗೆ ಅನುಮೋದನೆ ನೀಡಲು ₹75 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಇಬ್ಬರು ಇಂಜಿನಿಯರ್ಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಶೋಕ್ ಮತ್ತು ಕಾಶಿನಾಥ್ ಎಂದು ಗುರುತಿಸಲಾಗಿದೆ. ಇವರು ರಿಯಲ್ ಎಸ್ಟೇಟ್ ಉದ್ಯಮಿ ವೀರೇಶ್ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಖಾಸಗಿ ಲೇಔಟ್ಗೆ ಅಗತ್ಯ ಅನುಮೋದನೆ ನೀಡಲು ಹಣ ನೀಡುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ.
ಬಳ್ಳಾರಿಯ 2.47 ಎಕರೆ ವಿಸ್ತೀರ್ಣದ ಖಾಸಗಿ ಲೇಔಟ್ಗೆ ಅನುಮತಿ ನೀಡುವ ಸಂಬಂಧ ಒಟ್ಟು ₹75 ಸಾವಿರ ಲಂಚ ಕೇಳಲಾಗಿತ್ತು. ಅದರಂತೆ ಮೊದಲ ಕಂತಾಗಿ ₹55 ಸಾವಿರವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.
ಲಂಚವಾಗಿ ಪಡೆದ ಹಣವನ್ನು ಇಬ್ಬರೂ ಹಂಚಿಕೊಳ್ಳುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
