ಭಟ್ಕಳ: ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ (ಎಬಿ–ಆರ್ಕೆ) ಯೋಜನೆಯ 2026–27ನೇ ಸಾಲಿನ ರಾಜ್ಯಮಟ್ಟದ ಕಾರ್ಯಕ್ಷಮತೆ ಮೌಲ್ಯಮಾಪನದಲ್ಲಿ ಭಟ್ಕಳ ತಾಲೂಕು ಆಸ್ಪತ್ರೆ ಗಮನಾರ್ಹ ಸಾಧನೆ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವ ಆಸ್ಪತ್ರೆ, ರಾಜ್ಯಮಟ್ಟದಲ್ಲಿ 37ನೇ ಸ್ಥಾನ ಗಳಿಸಿದೆ.
ಎಬಿ–ಆರ್ಕೆ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅರ್ಹ ಫಲಾನುಭವಿಗಳ ನೋಂದಣಿ, ಚಿಕಿತ್ಸಾ ಸೌಲಭ್ಯಗಳ ಸಮರ್ಪಕ ಬಳಕೆ ಹಾಗೂ ಸರ್ಕಾರದ ಆರೋಗ್ಯ ಸೇವೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸಿರುವ ಕಾರ್ಯಕ್ಷಮತೆಯನ್ನು ಆಧರಿಸಿ ಈ ಶ್ರೇಯಾಂಕ ನೀಡಲಾಗಿದೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅರುಣ ಕುಮಾರ, ವೈದ್ಯರು, ಶುಶ್ರೂಷಕರು, ವೈದ್ಯಕೀಯ ಹಾಗೂ ವೈದ್ಯಕೇತರ ಸಿಬ್ಬಂದಿ, ಆಡಳಿತ ವಿಭಾಗದ ಸಿಬ್ಬಂದಿ ಮತ್ತು ಸಾರ್ವಜನಿಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿಯೂ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಒದಗಿಸುವುದರ ಜೊತೆಗೆ, ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಸ್ಪತ್ರೆ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಭಟ್ಕಳ ತಾಲೂಕು ಆಸ್ಪತ್ರೆಯ ಈ ಸಾಧನೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
