ಕಾರವಾರ: ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮತ್ತು ಮಾರಾಟ ನಡೆಸಿದ ಆರೋಪ ಇಲಾಖಾ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಸಂತೋಷ್ ಲಮಾಣಿ ಅವರನ್ನು ಸೇವೆಯಿಂದ ವಜಾಗೊಳಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಆದೇಶ ಹೊರಡಿಸಿದ್ದಾರೆ.

ಸಂತೋಷ್ ಲಮಾಣಿ ಅವರು ಗೋವಾ ಗಡಿ ಭಾಗದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಅಕ್ರಮ ಮದ್ಯ ಸಾಗಾಟ ಹಾಗೂ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಆರೋಪ ಕೇಳಿಬಂದಿತ್ತು. ವಿವಿಧ ಠಾಣೆಗಳಿಗೆ ವರ್ಗಾವಣೆಯಾದ ಬಳಿಕವೂ ಗಡಿ ಪ್ರದೇಶದ ಸಂಪರ್ಕವನ್ನು ಬಳಸಿಕೊಂಡು ಅಕ್ರಮ ಚಟುವಟಿಕೆ ಮುಂದುವರಿಸಿದ್ದರೆಂದು ಇಲಾಖಾ ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

2024ರ ಜೂನ್ ತಿಂಗಳಲ್ಲಿ ಗೋವಾದಿಂದ ಗೋಕರ್ಣದತ್ತ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ಅವರು ಪೊಲೀಸರ ಬಲೆಗೆ ಬಿದ್ದಿದ್ದರು. ಈ ಘಟನೆ ಬಳಿಕ ಅವರನ್ನು ಅಮಾನತುಗೊಳಿಸಲಾಗಿತ್ತು. ನಂತರ ಮತ್ತೊಂದು ಠಾಣೆಗೆ ವರ್ಗಾವಣೆಯಾದರೂ ಅಕ್ರಮ ಚಟುವಟಿಕೆ ಮುಂದುವರಿಸಿದ್ದರೆಂಬ ಆರೋಪಗಳು ಮತ್ತೆ ಕೇಳಿಬಂದಿದ್ದವು.

ನ್ಯಾಯಾಲಯದ ಕೆಲಸದ ನಿಮಿತ್ತ ಕಾರವಾರಕ್ಕೆ ತೆರಳುತ್ತಿರುವುದಾಗಿ ತಿಳಿಸಿದ್ದ ಸಂದರ್ಭದಲ್ಲಿಯೂ ಮತ್ತೊಮ್ಮೆ ಗೋವಾ ಮದ್ಯ ಸಾಗಾಟ ಪ್ರಕರಣದಲ್ಲಿ ಅವರ ಹೆಸರು ಬೆಳಕಿಗೆ ಬಂದಿತ್ತು. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾದ ಅಕ್ರಮ ಮದ್ಯ ಸಾಗಣೆ ವಾಹನದ ತನಿಖೆಯಲ್ಲೂ ಅವರ ಪಾತ್ರ ಉಲ್ಲೇಖವಾಗಿತ್ತು.

ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾತೇನಹಳ್ಳಿ ಅವರ ನೇತೃತ್ವದಲ್ಲಿ ನಡೆದ ಇಲಾಖಾ ತನಿಖೆಯಲ್ಲಿ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ, ಸಂತೋಷ್ ಲಮಾಣಿ ಅವರನ್ನು ಪೊಲೀಸ್ ಇಲಾಖೆಯ ಸೇವೆಯಿಂದ ವಜಾಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. ಈ ಕ್ರಮದ ಮೂಲಕ ಅಕ್ರಮ ಚಟುವಟಿಕೆಯಲ್ಲಿ ತೊಡಗುವ ಸಿಬ್ಬಂದಿಯ ವಿರುದ್ಧ ಇಲಾಖೆ ಕಠಿಣ ನಿಲುವು ತಾಳಿರುವುದು ಮತ್ತೊಮ್ಮೆ ಸ್ಪಷ್ಟವಾಗಿದೆ.

Related News

error: Content is protected !!