ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಹಾಗೂ ಅವರ ಆಪ್ತ ಸಹಾಯಕ ಶಿವಕುಮಾರ್ ಅವರನ್ನು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಮಾಹಿತಿಯ ಪ್ರಕಾರ, ಎಚ್.ಡಿ.ಕೋಟೆ ತಾಲೂಕಿನ ಜಮೀನಿಗೆ ಸಂಬಂಧಿಸಿದ ಪ್ರಕರಣವೊಂದು ಹುಣಸೂರು ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಪ್ರಕರಣದಲ್ಲಿ ಅನುಕೂಲಕರ ಆದೇಶ ನೀಡುವ ಸಲುವಾಗಿ ಬೆಂಗಳೂರಿನ ನಿವಾಸಿ ಡಾ. ರೂಪಾ ಅವರಿಂದ ಒಟ್ಟು ₹10.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.

ಆರೋಪದಂತೆ, ಮೊದಲ ಹಂತದಲ್ಲಿ ₹5 ಲಕ್ಷ ಹಣವನ್ನು ಈಗಾಗಲೇ ಸ್ವೀಕರಿಸಲಾಗಿತ್ತು. ಉಳಿದ ₹5.50 ಲಕ್ಷವನ್ನು ಎರಡನೇ ಕಂತಾಗಿ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಪವಿಭಾಗಾಧಿಕಾರಿಯ ನಿವಾಸದಲ್ಲೇ ಹಣ ಸ್ವೀಕರಿಸಲಾಗುತ್ತಿತ್ತು ಎನ್ನಲಾಗಿದ್ದು, ಕಾರ್ಯಾಚರಣೆಯ ವೇಳೆ ಕಾವ್ಯಾರಾಣಿ ಮತ್ತು ಶಿವಕುಮಾರ್ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಾವ್ಯಾರಾಣಿ ಅವರು ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಭಟ್ಕಳದಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಲೋಕಾಯುಕ್ತ ಡಿವೈಎಸ್‌ಪಿ ಶೈಲೇಂದ್ರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ತನಿಖಾಧಿಕಾರಿ ರವಿಕುಮಾರ್, ಮಡಿಕೇರಿ ಡಿವೈಎಸ್‌ಪಿ ದಿನಕರ ಶೆಟ್ಟಿ, ಇನ್‌ಸ್ಪೆಕ್ಟರ್ ವೀಣಾ ನಾಯಕ್ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಪ್ರಕರಣದ ಕುರಿತು ಲೋಕಾಯುಕ್ತ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದು, ಆರೋಪಗಳ ಸತ್ಯಾಸತ್ಯತೆ ಅಧಿಕೃತ ತನಿಖೆ ಪೂರ್ಣಗೊಂಡ ಬಳಿಕವೇ ಸ್ಪಷ್ಟವಾಗಲಿದೆ.

Related News

error: Content is protected !!