ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಿನಾತ್ತುಕಡವು ಸಮೀಪ ಮಹಿಳೆಯೊಬ್ಬಳನ್ನು ಕೊಲೆ ಮಾಡಿ, ಬಳಿಕ ಶವಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಪ್ರಿಯಕರ ಹಾಗೂ ಆತನ ತಂದೆಯನ್ನು ಬಂಧಿಸಿದ್ದಾರೆ.

ಕೆಲವು ದಿನಗಳ ಹಿಂದೆ ಖಾಸಗಿ ಸಂಸ್ಥೆಯೊಂದರ ಹಿಂಭಾಗದಲ್ಲಿ ಸುಮಾರು 30 ವರ್ಷದ ಮಹಿಳೆಯ ಅರೆಬೆಂದ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಿ, ಘಟನಾ ಸ್ಥಳದ ಸುತ್ತಮುತ್ತಲಿನ 120ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದರು.

ತನಿಖೆ ವೇಳೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬೈಕ್‌ವೊಂದು ಪೊಲೀಸರ ಗಮನ ಸೆಳೆದಿತ್ತು. ಬೈಕ್‌ನ ನೋಂದಣಿ ಸಂಖ್ಯೆ ಆಧರಿಸಿ ನಡೆಸಿದ ತನಿಖೆಯಲ್ಲಿ ಅದು ಪೊಲ್ಲಾಚಿ ನಿವಾಸಿ ಪಳನಿಮುತ್ತು (35) ಎಂಬಾತನದ್ದಾಗಿರುವುದು ಪತ್ತೆಯಾಯಿತು. ಬಳಿಕ ಆತನನ್ನು ಹಾಗೂ ತಂದೆ ಗುರುನಾಥನ್ (60) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣದ ಸತ್ಯ ಬಯಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಪಳನಿಮುತ್ತುಗೆ ಈಗಾಗಲೇ ಮದುವೆಯಾಗಿದ್ದರೂ ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ. ಈ ನಡುವೆ ಸಂಗೀತಾ (30) ಎಂಬ ಮಹಿಳೆಯೊಂದಿಗೆ ಆತನಿಗೆ ಆತ್ಮೀಯ ಸಂಬಂಧ ಬೆಳೆದಿತ್ತು. ಎರಡು ತಿಂಗಳ ಹಿಂದೆ ಸಂಗೀತಾ ತನ್ನ ಕುಟುಂಬವನ್ನು ತೊರೆದು ಪಳನಿಮುತ್ತು ಜೊತೆ ಬಾಡಿಗೆ ಮನೆಯಲ್ಲಿ ವಾಸಕ್ಕೆ ಬಂದಿದ್ದಳು.

ಇತ್ತೀಚಿನ ದಿನಗಳಲ್ಲಿ ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಪದೇಪದೆ ಜಗಳವಾಗುತ್ತಿತ್ತು. ಘಟನೆ ನಡೆದ ದಿನವೂ ವಾಗ್ವಾದ ನಡೆದಿದ್ದು, ನಂತರ ಪಳನಿಮುತ್ತು ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದಾಗ ಸಂಗೀತಾ ನಿರಾಕರಿಸಿದ್ದಾಳೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಆರೋಪಿ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಸಾಕ್ಷ್ಯ ನಾಶಪಡಿಸಲು ಪಳನಿಮುತ್ತು ತನ್ನ ತಂದೆಯ ಸಹಾಯ ಪಡೆದಿದ್ದಾನೆ. ಇಬ್ಬರೂ ಸೇರಿ ಮೃತದೇಹವನ್ನು ಚೀಲದಲ್ಲಿ ತುಂಬಿ ಬೈಕ್‌ನಲ್ಲಿ ಸಾಗಿಸಿ, ಮಾರ್ಗಮಧ್ಯೆ ಪೆಟ್ರೋಲ್ ಖರೀದಿಸಿ ನಿರ್ಜನ ಪ್ರದೇಶದಲ್ಲಿ ಶವದ ಮೇಲೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸಿಸಿಟಿವಿ ದೃಶ್ಯಾವಳಿ ಹಾಗೂ ಇತರೆ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಘಟನೆ ಕೊಯಮತ್ತೂರು ಜಿಲ್ಲೆಯಲ್ಲಿ ಭಾರೀ ಆಘಾತಕ್ಕೆ ಕಾರಣವಾಗಿದೆ.

Related News

error: Content is protected !!