ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಸಂಸ್ಥೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ಕಾರ್ಯಾಚರಣೆ ನಡೆಸಿ, ದಾಖಲೆಗಳು ಮತ್ತು ಕಡತಗಳನ್ನು ಪರಿಶೀಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸ್ವಯಂಪ್ರೇರಿತವಾಗಿ (ಸುಮೋಟೋ) ಪ್ರಕರಣ ದಾಖಲಿಸಿಕೊಂಡು ಈ ಪರಿಶೀಲನಾ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲಾ ಲೋಕಾಯುಕ್ತ ಎಸ್‌ಪಿ ದಿನೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕಾರವಾರ ನಗರಸಭೆಯಲ್ಲಿ ಕಡತಗಳ ಪರಿಶೀಲನೆ

ಗುರುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ಕಾರವಾರ ನಗರಸಭೆಗೆ ಭೇಟಿ ನೀಡಿದರು. ಕಂದಾಯ, ತೆರಿಗೆ ಸೇರಿದಂತೆ ವಿವಿಧ ವಿಭಾಗಗಳಿಗೆ ಸಂಬಂಧಿಸಿದ ಕಡತಗಳನ್ನು ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿದರು.

ವಿಶೇಷವಾಗಿ ಬಾಕಿ ಉಳಿದಿರುವ ಕಡತಗಳ ವಿಲೇವಾರಿ, ದಾಖಲೆಗಳ ನಿರ್ವಹಣೆ ಹಾಗೂ ಕಚೇರಿ ಕಾರ್ಯವೈಖರಿ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದರು. ಈ ವೇಳೆ ನಗರಸಭೆ ಆಯುಕ್ತ ಜಗದೀಶ ಹುಲಿಗೆಜ್ಜೆ ಅವರ ಕೊಠಡಿಗೂ ತೆರಳಿದ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.

ಶಿರಸಿ ನಗರಸಭೆಯಲ್ಲೂ ಪರಿಶೀಲನೆ

ಕಾರವಾರದ ಜೊತೆಗೆ ಶಿರಸಿ ನಗರಸಭೆಗೂ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿ, ವಿವಿಧ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿದೆ ಎಂದು ತಿಳಿದುಬಂದಿದೆ.

ಇದಷ್ಟೇ ಅಲ್ಲದೆ ಜಿಲ್ಲೆಯ 9 ಹಾಸ್ಟೆಲ್‌ಗಳು ಹಾಗೂ ಒಂದು ಆಸ್ಪತ್ರೆಗೂ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳು, ದಾಖಲೆಗಳು ಹಾಗೂ ಸಂಬಂಧಿತ ನಿರ್ವಹಣಾ ಮಾಹಿತಿಯನ್ನು ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯಾವ ಅಂಶದ ಆಧಾರದ ಮೇಲೆ ಸುಮೋಟೋ ಪ್ರಕರಣ?

ಒಂದೇ ದಿನ ಜಿಲ್ಲೆಯ ಹಲವು ಸರ್ಕಾರಿ ಕಚೇರಿಗಳು ಹಾಗೂ ಸಂಸ್ಥೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಆದರೆ, ಯಾವ ನಿರ್ದಿಷ್ಟ ದೂರು ಅಥವಾ ಅಂಶಗಳ ಆಧಾರದ ಮೇಲೆ ಸುಮೋಟೋ ಪ್ರಕರಣ ದಾಖಲಿಸಲಾಗಿದೆ? ಪರಿಶೀಲನೆ ವೇಳೆ ಯಾವುದೇ ಲೋಪದೋಷಗಳು ಪತ್ತೆಯಾಗಿವೆಯೇ? ಎಂಬುದರ ಕುರಿತು ಈವರೆಗೆ ಸಂಪೂರ್ಣ ಮಾಹಿತಿ ಬಹಿರಂಗವಾಗಿಲ್ಲ.

ದಾಖಲೆಗಳ ಪರಿಶೀಲನೆ ಹಾಗೂ ತನಿಖೆ ಪೂರ್ಣಗೊಂಡ ಬಳಿಕ ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿಯನ್ನು ಕ್ರೋಢೀಕರಿಸಿ ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕಾರ್ಯಾಚರಣೆಯ ಬಳಿಕ ಸರ್ಕಾರಿ ಕಚೇರಿಗಳಲ್ಲಿ ದಾಖಲೆ ನಿರ್ವಹಣೆ, ಬಾಕಿ ಕಡತಗಳ ವಿಲೇವಾರಿ ಹಾಗೂ ಸಾರ್ವಜನಿಕ ಸೇವೆಗಳಲ್ಲಿನ ಕಾರ್ಯವೈಖರಿ ಕುರಿತು ಮತ್ತಷ್ಟು ಮಾಹಿತಿ ಹೊರಬರುವ ನಿರೀಕ್ಷೆಯಿದೆ.

Related News

error: Content is protected !!