ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾನೆ. ಇದೇ ವೇಳೆ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಡಿ ನಾಲ್ವರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ.

ಹೊಕ್ರಾಣಿ ಗ್ರಾಮದ ಅಶ್ವಿನಿ (21) ರಾತ್ರಿ ವೇಳೆ ಬಹಿರ್ದೆಸೆಗೆಂದು ಮನೆಯಿಂದ ಹೊರಗೆ ತೆರಳಿದ್ದರು. ಆದರೆ ಬಹಳ ಸಮಯ ಕಳೆದರೂ ಅವರು ಮನೆಗೆ ಮರಳಿರಲಿಲ್ಲ. ಈ ಕುರಿತು ಕುಟುಂಬಸ್ಥರು ಸಿರವಾರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರೂ ಪೊಲೀಸರು ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಮರುದಿನ ಬೆಳಗ್ಗೆ ಗ್ರಾಮದ ಬಾವಿಯಲ್ಲಿ ಅಶ್ವಿನಿಯ ಮೃತದೇಹ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ತನಿಖೆ ವೇಳೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಮುಖ ಆರೋಪಿ ಗುಂಡ್ಯಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಮೂವರು ಆರೋಪಿಗಳ ವಿಚಾರಣೆ ಮುಂದುವರಿದಿದೆ.

ಯುವತಿ ನಾಪತ್ತೆಯಾಗಿದ್ದ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡಿದರೂ ತಕ್ಷಣ ಕ್ರಮ ಕೈಗೊಳ್ಳಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಹೋರಾಟ ನಡೆಸಿದ್ದರು. ಇದರ ಬೆನ್ನಲ್ಲೇ ಕರ್ತವ್ಯಲೋಪದ ಆರೋಪದಡಿ ಪೊಲೀಸ್ ಪೇದೆಗಳಾದ ಭೀಮರಡ್ಡಿ, ವೀರೇಶ, ದೇವರಾಜ ಹಾಗೂ ನಾಗರಾಜ ಅವರನ್ನು ಅಮಾನತು ಮಾಡಲಾಗಿದೆ.

ಪ್ರಕರಣದ ಆರೋಪಿಗಳ ವಿರುದ್ಧದ ತನಿಖೆ ಮುಂದುವರಿದಿದ್ದು, ಯುವತಿಯ ಸಾವಿಗೆ ಕಾರಣವಾದ ಸಂಪೂರ್ಣ ಘಟನೆ ಹಾಗೂ ಪೊಲೀಸರ ನಿರ್ಲಕ್ಷ್ಯದ ಆರೋಪಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Related News

error: Content is protected !!