ಬಂಗಾರಪೇಟೆ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೆಪ್ಟೆಂಬರ್ 2ರಂದು ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)-2023 ಹಾಗೂ ಪೋಕ್ಸೋ ಕಾಯ್ದೆ-2012ರ ಅನ್ವಯ ಪ್ರಕರಣ ದಾಖಲಿಸಲಾಗಿತ್ತು.

ದೂರು ಸ್ವೀಕರಿಸಿದ ತಕ್ಷಣ ಪೊಲೀಸರು ಕಾನೂನುಬದ್ಧವಾಗಿ ತನಿಖೆ ಆರಂಭಿಸಿದ್ದು, ಬಾಲಕಿಯನ್ನು ಆಕೆಯ ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬಾಲಕಿ ನೀಡಿದ ಮಾಹಿತಿಯ ಆಧಾರದ ಮೇಲೆ ಬಂಗಾರಪೇಟೆಯ ಬೋವಿನಗರ ನಿವಾಸಿ ರಾಘವೇಂದ್ರ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಪ್ರಕರಣದ ತನಿಖೆಯನ್ನು ನ್ಯಾಯಸಮ್ಮತ, ವೃತ್ತಿಪರ ಹಾಗೂ ಸಂವೇದನಾಶೀಲ ರೀತಿಯಲ್ಲಿ ನಡೆಸಲಾಗುತ್ತಿದ್ದು, ಬಾಲ ಸಂತ್ರಸ್ತೆಗೆ ಕಾನೂನಿನ ಪ್ರಕಾರ ಅಗತ್ಯ ನೆರವು ಮತ್ತು ರಕ್ಷಣೆಯನ್ನು ಒದಗಿಸಲಾಗುತ್ತಿದೆ. ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಯಾವುದೇ ಗಂಭೀರ ತೊಂದರೆ ಇಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ಸಂತ್ರಸ್ತ ಬಾಲಕಿಯ ಗುರುತನ್ನು ನೇರವಾಗಿ ಅಥವಾ ಪರೋಕ್ಷವಾಗಿ ಬಹಿರಂಗಪಡಿಸುವ ಯಾವುದೇ ಮಾಹಿತಿ, ಛಾಯಾಚಿತ್ರ, ವಿಡಿಯೋ, ವಿಳಾಸ, ಕುಟುಂಬದ ವಿವರಗಳು ಅಥವಾ ಇತರ ಮಾಹಿತಿಯನ್ನು ಪ್ರಕಟಿಸದಂತೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಪೊಲೀಸರು ಸಾರ್ವಜನಿಕರು ಮತ್ತು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

ಬಾಲಕಿಯ ಗೌಪ್ಯತೆ ಮತ್ತು ಘನತೆಯನ್ನು ಕಾನೂನಿನ ಪ್ರಕಾರ ಕಟ್ಟುನಿಟ್ಟಾಗಿ ರಕ್ಷಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬದ್ಧವಾಗಿ ಬಹಿರಂಗಪಡಿಸಬಹುದಾದ ಹೆಚ್ಚಿನ ಮಾಹಿತಿಯನ್ನು ಸೂಕ್ತ ಹಂತದಲ್ಲಿ ಪ್ರಕಟಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ತಿಳಿಸಿದ್ದಾರೆ.

ಡಿವೈಎಸ್‌ಪಿ ಲಕ್ಷ್ಮಯ್ಯ ವಿ. ಅವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಪೊಲೀಸ್ ಇನ್ಸ್‌ಪೆಕ್ಟರ್ ರವಿಕುಮಾರ್ ಸಿ., ಪಿಎಸ್‌ಐ ರಾಜಣ್ಣ ಎಸ್.ವಿ. ಹಾಗೂ ಸಿಬ್ಬಂದಿಗಳಾದ ಚಲಪತಿ, ಹರೀಶ್, ತಾಜ್ ಪಾಷಾ ಮತ್ತು ಮುನಿರಾಜು ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸ್ ತಂಡದ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರು ಪ್ರಶಂಸಿಸಿದ್ದಾರೆ.

Related News

error: Content is protected !!