
ರಾಯಚೂರು: ಅನೈತಿಕ ಸಂಬಂಧದ ಅನುಮಾನಕ್ಕೆ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಊಟ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಆರೋಪಿ ಮಚ್ಚಿನಿಂದ ಏಕಾಏಕಿ ದಾಳಿ ನಡೆಸಿದ್ದು, ಐದಾರು ಏಟಿಗೆ ಹನುಮೇಶ್ (32) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹನುಮೇಶ್ ಅವರ ಕುಟುಂಬಸ್ಥರು ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಹನುಮೇಶ್ ಒಬ್ಬರೇ ಊಟ ಮಾಡುತ್ತಿದ್ದರು. ಇದೇ ವೇಳೆ ಆರೋಪಿ ಶಂಕರ (23) ಮನೆಗೆ ಪ್ರವೇಶಿಸಿದ್ದಾನೆ. ಯಾವುದೇ ಮುನ್ಸೂಚನೆ ನೀಡದೆ ಹಿಂಬದಿಯಿಂದ ಮಚ್ಚಿನಿಂದ ಹನುಮೇಶ್ ಮೇಲೆ ದಾಳಿ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಹನುಮೇಶ್ ಊಟದ ತಟ್ಟೆಯಲ್ಲೇ ಕುಸಿದು ಮೃತಪಟ್ಟಿದ್ದಾರೆ.
ಅನೈತಿಕ ಸಂಬಂಧದ ಅನುಮಾನವೇ ಕೊಲೆಗೆ ಕಾರಣ?
ಆರೋಪಿಯ ಸಹೋದರಿ ಜೊತೆ ಹನುಮೇಶ್ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ ಶಂಕರನಲ್ಲಿತ್ತು ಎನ್ನಲಾಗಿದೆ. ಇದೇ ಅನುಮಾನದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಹತ್ಯೆಗೂ ಮುನ್ನ ಆರೋಪಿ ಶಂಕರ ಮಚ್ಚು ಹಿಡಿದುಕೊಂಡಿರುವ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದ್ದು, ಈ ಅಂಶವೂ ಪ್ರಕರಣದಲ್ಲಿ ಕುತೂಹಲ ಮೂಡಿಸಿದೆ.
ಹತ್ಯೆ ಮಾಡಿದ ಬಳಿಕ ಆರೋಪಿ ಶಂಕರ ಖುದ್ದಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸದ್ಯ ಮಾನ್ವಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಯ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯ ಬಗ್ಗೆ ತನಿಖೆ ಮುಂದುವರಿದಿದೆ.
ಇತ್ತ ಹನುಮೇಶ್ ಕುಟುಂಬಸ್ಥರು ಕಣ್ಣೀರಾಗಿದ್ದು, “ನನ್ನ ಮಗ ಅಂಥವನಲ್ಲ. ತಪ್ಪು ಮಾಡಿದ್ದರೆ ಕಾನೂನು ಇತ್ತು, ಹೀಗೆ ಕೊಲೆ ಮಾಡುವ ಅಗತ್ಯವೇನಿತ್ತು?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.






