
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸುಂಕದ ಕಟ್ಟೆ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಕುಮಾರ್ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನವೀನ್ ಕುಮಾರ್, ಆರೋಪಿಯ ವಿಡಿಯೋ ಸಾಮಾಜಿಕ ಭದ್ರತೆಗೆ ಧಕ್ಕೆ ತರುವಂತದ್ದಾಗಿದೆ ಹಾಗೂ ಕೋಮುಗಲಭೆಗೆ ಪ್ರಚೋದನೆ ನೀಡುವ ಪ್ರಯತ್ನವಾಗಿದೆ ಎಂದು ದೂರಿದ್ದರು.
ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಬಂಧಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ದುರುಪಯೋಗವಾಗುವಂತಹ ವಿಷಯಗಳನ್ನು ಹಂಚುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.