
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣಕ್ಕೆ ಅಕ್ರಮವಾಗಿ ಗಾಂಜಾ ಪೂರೈಕೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬೇಟೆ ಹಾಕಿ ಬಂಧಿಸಿದ್ದಾರೆ. ಬಂಧಿತನನ್ನು ವಿಜಯ್ ಅಲಿಯಾಸ್ ಬಾಂದ್ರಾ (22) ಎಂದು ಗುರುತಿಸಲಾಗಿದೆ.
ಆಂಧ್ರ ಪ್ರದೇಶದಿಂದ ಗಾಂಜಾ ಸಾಗಾಟ ಮಾಡಿಕೊಂಡು ಬಂದು ವಿಜಯಪುರದೊಳಗೆ ಮಾರಾಟ ಮಾಡುತ್ತಿದ್ದ ವಿಜಯ್, ಹಲವು ವರ್ಷಗಳಿಂದ ಈ ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ, ಇನ್ಸ್ಪೆಕ್ಟರ್ ಪ್ರಶಾಂತ್ ನಾಯಕ ಅವರ ನೇತೃತ್ವದಲ್ಲಿ ವಿಜಯಪುರ ಪೊಲೀಸ್ ತಂಡ ದಾಳಿ ನಡೆಸಿ ವಿಜಯ್ ಅವರನ್ನು ವಶಕ್ಕೆ ಪಡೆದಿದೆ.
ಬಂಧಿತನಿಂದ ಮೌಲ್ಯವು ಸುಮಾರು ಒಂದು ಲಕ್ಷ ರೂಪಾಯಿಗಳಷ್ಟು ಇರುವ 1 ಕೆ.ಜಿ 710 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.