ಧಾರವಾಡ: ಮುಂಗಾರು ಮುನ್ಸೂಚನೆಯ ಹಿನ್ನೆಲೆದಲ್ಲಿ ಜಿಲ್ಲೆಯಾದ್ಯಂತ ಭಾರಿ ಮಳೆಯ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಅತಿರಿಕ್ತ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕೆಯ ಕ್ರಮವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಸಂಭವಿಸಬಹುದಾದ ಮಳೆ, ಗಾಳಿ ಮತ್ತು ಪ್ರವಾಹದಿಂದ ಉಂಟಾಗುವ ಅನಾಹುತಗಳಿಗೆ ತಕ್ಷಣ ಸ್ಪಂದನೆ ನೀಡುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. “ಯಾವುದೇ ಕಾರಣಕ್ಕೂ ತಮ್ಮ ಕಾರ್ಯಕ್ಷೇತ್ರವನ್ನು ಬಿಟ್ಟು ಹೋಗಬಾರದು. ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಜಿಲ್ಲಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆದು ರಜೆ ತೆಗೆದುಕೊಳ್ಳಬೇಕು,” ಎಂದು ಅವರು ಎಚ್ಚರಿಸಿದ್ದಾರೆ.

ಅಲ್ಲದೆ, ಮಳೆಯಿಂದಾಗಿ ಹಾನಿಗೆ ಒಳಗಾಗುವ ಸಾರ್ವಜನಿಕ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಮರುಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಇಲಾಖಾಧಿಕಾರಿಗಳಿಗೆ ದಿವ್ಯಪ್ರಭು ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಸಭೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

ಹವಾಮಾನ ಇಲಾಖೆ ವರದಿಯ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ, ನಿರಂತರ ವೀಕ್ಷಣೆಯೊಂದಿಗೆ ತುರ್ತು ಪರಿಸ್ಥಿತಿಗೆ ಸಿದ್ಧವಾಗುವಂತೆ ಎಲ್ಲಾ ಇಲಾಖೆಗಳಿಗೂ ಸೂಚಿಸಲಾಗಿದೆ.

ಇಂತಹ ಸಂದರ್ಭಗಳಲ್ಲಿ ಸರಕಾರದ ಯಂತ್ರಾಂಗದ ಚುರುಕಾದ ಕಾರ್ಯಕ್ಷಮತೆ ಜನಜೀವನ ರಕ್ಷಿಸುವಲ್ಲಿ ಬಹುಮುಖ್ಯವಾಗಿರುವುದರಿಂದ ಎಲ್ಲ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಗೆ ತಕ್ಷಣ ಸ್ಪಂದಿಸಬೇಕಾಗಿದೆ. ವರದಿ: ಶಿವರಾಜ್ ಪಿ.ಆರ್.

Related News

error: Content is protected !!