
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ಹೊರವಲಯದಲ್ಲಿ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರ ಪಕ್ಕದ ತಗ್ಗಿನಲ್ಲಿ ಭೀಕರ ಘಟನೆ ನಡೆದಿದೆ. ಸುಮಾರು 40 ವರ್ಷ ವಯಸ್ಸಿನ ಅನಾಮಿಕ ಮಹಿಳೆಯ ಶವ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಹಿಳೆಯ ಮೇಲೆ ಮೊದಲಿಗೆ ಅತ್ಯಾಚಾರ ಎಸಗಿದ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆಯೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಪೆಟ್ರೋಲ್ ಬಳಕೆಯ ಸುಳಿವುಗಳು ದೊರೆತಿದ್ದು, ಈ ನಿಟ್ಟಿನಲ್ಲಿ ತನಿಖೆ ಆರಂಭಿಸಲಾಗಿದೆ.
ಘಟನಾ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ ಹಾಗೂ ಪಿಎಸ್ಐ ತಿರುಮಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ದಾರುಣ ಘಟನೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯ ಗುರುತು ಪತ್ತೆಹಚ್ಚುವ ಮತ್ತು ಅಪರಾಧಿಗಳನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಸ್ಥಳೀಯರಲ್ಲಿ ಆತಂಕ ಮೂಡಿಸಿರುವ ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.






