ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ ಬೆಂಗಳೂರಿನ ಎಚ್‌ಎಎಲ್ ಠಾಣೆಯ ಮೂವರು ಪೊಲೀಸರು ಲಂಚ ಸ್ವೀಕರಿಸುವ ವೇಳೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ಎಚ್‌ಎಎಲ್ ಠಾಣೆಯ ಪಿಎಸ್‌ಐ ಅನಿತಾ, ಹೆಡ್ ಕಾನ್‌ಸ್ಟೆಬಲ್ ಉಳುವಪ್ಪ ಹಾಗೂ ಕಾನ್‌ಸ್ಟೆಬಲ್ ಯತೀಶ್ ಬಂಧಿತ ಪೊಲೀಸರು. ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯೊಬ್ಬರಿಂದ ಎರಡು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಇವರ ಮೇಲಿದೆ.

ಆರೋಪಿಗಳು ಬೇಡಿಕೆ ಇಟ್ಟಿದ್ದ ಹಣದಲ್ಲಿ ಮುಂಗಡವಾಗಿ 40 ಸಾವಿರ ರೂಪಾಯಿ ಸ್ವೀಕರಿಸುವ ವೇಳೆ ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಎಸಿಬಿ ಎಎಸ್‌ಪಿ ಭೂಪೇಂದ್ರ ಚೌಧರಿ ನೇತೃತ್ವದಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ.

ಪ್ರಕರಣ ಸಂಬಂಧ ಜೈಪುರ ಎಸಿಬಿ ಅಧಿಕಾರಿಗಳು ಬಂಧಿತ ಪೊಲೀಸರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಲಂಚ ಪ್ರಕರಣದಲ್ಲಿ ಬೆಂಗಳೂರು ಪೊಲೀಸರ ಬಂಧನದ ಕುರಿತು ರಾಜಸ್ಥಾನದ ಎಸಿಬಿ ಅಧಿಕಾರಿಗಳು ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಈ ಘಟನೆ ಬೆಂಗಳೂರು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದ್ದು, ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿಯೂ ಪರಿಶೀಲನೆ ಆರಂಭವಾಗಿದೆ. ಸದ್ಯ ಎಸಿಬಿ ಅಧಿಕಾರಿಗಳು ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಲಂಚ ಬೇಡಿಕೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

Related News

error: Content is protected !!