ಕಲಬುರಗಿ: ಸರ್ಕಾರದ ವಸತಿ ಯೋಜನೆಯ ಅನುದಾನ ಬಿಡುಗಡೆ ಮಾಡಲು ಫಲಾನುಭವಿಯಿಂದ ಫೋನ್‌ಪೇ ಮೂಲಕ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್‌ನನ್ನು ಕಲಬುರಗಿ ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹನಿಕೇರಾ ಗ್ರಾಮದ ರಾಮನಾಯಕ ತಾಂಡಾದ ನಿವಾಸಿ ಸಿಖಂದರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅವರ ಅಕ್ಕ ಸವಿತಾ ಅವರಿಗೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಮನೆ ಮಂಜೂರಾಗಿದ್ದು, ಯೋಜನೆಯ 3ನೇ ಹಾಗೂ 4ನೇ ಕಂತಿನ ಅನುದಾನ ಬಿಡುಗಡೆ ಮಾಡಲು ಕರದಾಳ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಸಂತೋಷ ರಾಠೋಡ ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ನಂತರ ಮಾತುಕತೆಯ ವೇಳೆ ₹15 ಸಾವಿರವನ್ನು ತನ್ನ ಫೋನ್‌ಪೇ ಖಾತೆಗೆ ವರ್ಗಾಯಿಸುವಂತೆ ಆರೋಪಿ ಸೂಚಿಸಿದ್ದಾನೆ. ಅದರಂತೆ ದೂರುದಾರರು ಡಿಜಿಟಲ್ ಪಾವತಿ ಮಾಡಿದ ವೇಳೆ, ಪೂರ್ವಸಿದ್ಧತೆಯೊಂದಿಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಸಂತೋಷ ರಾಠೋಡನನ್ನು ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಬಂಧಿಸಿದ್ದಾರೆ.

ಈ ದಾಳಿ ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಇನ್ಸ್‌ಪೆಕ್ಟರ್ ರಾಜಶೇಖರ ಬಡದೇಸಾರ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.

ಬಂಧಿತ ಆರೋಪಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ಮುಂದಿನ ತನಿಖೆ ಪೂರ್ಣಗೊಳಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related News

error: Content is protected !!