ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ–ಭಟ್ಕಳ ರೈಲು ಮಾರ್ಗದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ರೈಲಿನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತ ವಿದ್ಯಾರ್ಥಿಯ ಕುಟುಂಬಸ್ಥರು ಇದು ಸಾಮಾನ್ಯ ಅಪಘಾತ ಅಥವಾ ಆತ್ಮಹತ್ಯೆಯಲ್ಲ ಎಂದು ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಭಟ್ಕಳ ತಾಲ್ಲೂಕಿನ ಹೆಬಳೆಯ ಬುಸಾರಮನೆ ನಿವಾಸಿ ಯತೀನ್ ಲಕ್ಷ್ಮಣ ಮೊಗೇರ್ (18) ಎಂದು ಗುರುತಿಸಲಾಗಿದೆ.

ಲಭ್ಯ ಮಾಹಿತಿಯಂತೆ, ಜೂನ್ 12ರಂದು ಸಂಜೆ ಯತೀನ್ ಗೋಕರ್ಣದಿಂದ ಭಟ್ಕಳದತ್ತ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ನುಶಿಕೋಟೆ ಸಮೀಪ ತಲುಪಿದ ವೇಳೆ ಅವರು ರೈಲಿನಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗಳ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಜೆ 5.30ರಿಂದ 7.30ರ ಅವಧಿಯಲ್ಲಿ ನಡೆದಿರುವ ಸಾಧ್ಯತೆ ಇದೆ.

ಮೃತನ ತಂದೆ ಲಕ್ಷ್ಮಣ ನಾರಾಯಣ ಮೊಗೇರ್, “ನನ್ನ ಮಗ ಆತ್ಮಹತ್ಯೆ ಮಾಡಿಕೊಳ್ಳುವಂತಹ ಮನಸ್ಥಿತಿಯವನಲ್ಲ. ಆಕಸ್ಮಿಕವಾಗಿ ಕಾಲು ಜಾರಿ ಬೀಳುವ ಸಾಧ್ಯತೆಯೂ ಕಡಿಮೆ. ಸಹ ಪ್ರಯಾಣಿಕರಿಂದ ತಳ್ಳಲ್ಪಟ್ಟಿರಬಹುದೆಂಬ ಅನುಮಾನವಿದೆ. ಪ್ರಕರಣದ ಪ್ರತಿಯೊಂದು ಆಯಾಮವನ್ನು ತನಿಖೆ ಮಾಡಿ ಸತ್ಯಾಂಶವನ್ನು ಹೊರತರುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿಯ ಸಾವು ಅಪಘಾತವೇ, ಆತ್ಮಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣದಿಂದ ಸಂಭವಿಸಿರುವುದೇ ಎಂಬುದು ತನಿಖೆ ಪೂರ್ಣಗೊಂಡ ಬಳಿಕವೇ ಸ್ಪಷ್ಟವಾಗಲಿದೆ.

ಸ್ಥಳೀಯರು ಹಾಗೂ ಕುಟುಂಬ ಸದಸ್ಯರು ಘಟನೆಯ ಕುರಿತು ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Related News

error: Content is protected !!