ಚಿಕ್ಕಬಳ್ಳಾಪುರದ ಬಿಬಿ ರಸ್ತೆಯ ಎಸ್ಬಿಐ ಬ್ಯಾಂಕ್ ಬಳಿಯಲ್ಲಿಂದು ಮುಂಜಾನೆ ಹೃದಯವಿದ್ರಾವಕ ಘಟನೆ ನಡೆಯಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಯುವಕನನ್ನು ಹತ್ಯೆಗೈದಿದ್ದಾರೆ. ಹತ್ಯೆಗೀಡಾದ ವ್ಯಕ್ತಿಯನ್ನು ಚಾಮರಾಜಪೇಟೆ ಕಾಲೋನಿಯ ನಿವಾಸಿ ಶ್ರೀಕಾಂತ್ (29) ಎಂದು ಗುರುತಿಸಲಾಗಿದೆ.
ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಶ್ರೀಕಾಂತ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಚಿಕ್ಕಬಳ್ಳಾಪುರದಲ್ಲಿ ವಾಸಿಸುತ್ತಿದ್ದರು. ಬುಧವಾರ ಬೆಳಗಿನ ಜಾವ ನಡೆದ ಈ ಕ್ರೂರ ಹತ್ಯೆಯ ಹಿನ್ನೆಲೆಯಲ್ಲಿ ಸ್ಥಳೀಯರು ಬೆಚ್ಚಿಬಿದ್ದರು.
ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಶವದ ಪಕ್ಕದಲ್ಲಿಯೇ ರಕ್ತಸಿಕ್ತ ಕಲ್ಲು ಪತ್ತೆಯಾಗಿದೆ. ಇದುವರೆಗೆ ಹತ್ಯೆಗೆ ಸ್ಪಷ್ಟ ಕಾರಣ ಬೆಳಕಿಗೆ ಬಂದಿಲ್ಲ. ಆದರೆ ವೈಯಕ್ತಿಕ ದ್ವೇಷವೇ ಈ ಕೃತ್ಯದ ಹಿಂದೆ ಇರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ಶಂಕೆ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ಪ್ರಗತಿಯಲ್ಲಿದೆ.
