ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸನುವಾ ಗ್ರಾಮದಲ್ಲಿ ಮಾನವೀಯತೆಯನ್ನೇ ಮರೆಸುವ ಘಟನೆ ಬೆಳಕಿಗೆ ಬಂದಿದೆ. ನಾಲ್ಕನೇ ಮಗುವೂ ಹೆಣ್ಣು ಮಗುವಾಗಿದ್ದಾಳೆ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ, ಬಳಿಕ ‘ತ್ರಿವಳಿ ತಲಾಖ್’ ಹೇಳಿ ಮನೆಯಿಂದ ಹೊರಹಾಕಿದ ಆರೋಪ ಕೇಳಿಬಂದಿದೆ.
28 ವರ್ಷದ ತಂಜೀಮ್ ಅವರು ಎಲೆಕ್ಟ್ರಿಷಿಯನ್ ಆಗಿರುವ ಬಾಬು ಖಾನ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಈಗಾಗಲೇ ಮೂವರು ಹೆಣ್ಣು ಮಕ್ಕಳು ಹಾಗೂ ಒಬ್ಬ ಗಂಡು ಮಗನಿದ್ದು, ಸುಮಾರು ಒಂದೂವರೆ ತಿಂಗಳ ಹಿಂದೆ ತಂಜೀಮ್ ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದಾದ ಬಳಿಕ ಪತಿ ಹಾಗೂ ಆತನ ಕುಟುಂಬಸ್ಥರಿಂದ ಕಿರುಕುಳ ಮತ್ತಷ್ಟು ಹೆಚ್ಚಾಗಿದೆ ಎಂದು ಸಂತ್ರಸ್ತೆ ದೂರಿದ್ದಾರೆ.
ಮದುವೆಯಾದ ಆರಂಭದಿಂದಲೇ ವರದಕ್ಷಿಣೆ ತರುವಂತೆ ಒತ್ತಾಯಿಸಲಾಗುತ್ತಿತ್ತು. ನಾಲ್ಕನೇ ಬಾರಿಯೂ ಹೆಣ್ಣು ಮಗು ಜನಿಸಿದ ನಂತರ ಹೆಚ್ಚುವರಿ ಹಣಕ್ಕಾಗಿ ತವರು ಮನೆಯಿಂದ ಹಣ ತರಬೇಕೆಂದು ಒತ್ತಡ ಹೇರಲಾಗುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ನಡೆದ ಜಗಳದ ವೇಳೆ ಬಾಬು ಖಾನ್ ಮರದ ದೊಣ್ಣೆಯಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಆಕೆಗೆ ಗಂಭೀರ ಗಾಯಗಳಾಗುವಂತೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ರಕ್ತಸ್ರಾವವಾಗುತ್ತಿದ್ದರೂ ತಂಜೀಮ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯದೇ, ಪತಿ ಹಾಗೂ ಕುಟುಂಬಸ್ಥರು ‘ತ್ರಿವಳಿ ತಲಾಖ್’ ಹೇಳಿ ಮನೆಯಿಂದ ಹೊರಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಹಾಲು ಕುಡಿಯುವ ಎಳೆಯ ಮಗುವನ್ನೂ ತಾಯಿಯಿಂದ ಬೇರ್ಪಡಿಸಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ತಂಜೀಮ್ ಅವರ ಪೋಷಕರು ಸ್ಥಳಕ್ಕೆ ಧಾವಿಸಿ, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಅವರು ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವೈದ್ಯಕೀಯ ವರದಿ ಹಾಗೂ ಲಭ್ಯವಾಗುವ ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
