ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಪತ್ನಿಯೇ ಪತಿಯ ಕ್ರೌರ್ಯಕ್ಕೆ ಬಲಿಯಾದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಪಕ್ಕದ ಮನೆಯ ಯುವತಿಯೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತಿಯು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಪತ್ನಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ.

ಹೊನ್ನಿಕೇರಿ ಗ್ರಾಮದ 26 ವರ್ಷದ ಸಂಜನಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಭಗವತ್ ಜ್ಞಾನೇಶ್ವರ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪತ್ನಿಯೊಂದಿಗೆ ಬೀದರ್‌ನ ಶಿವನಗರದಲ್ಲಿ ವಾಸವಾಗಿದ್ದನು. ಇಬ್ಬರಿಗೂ ಎರಡು ವರ್ಷಗಳ ಹಿಂದೆ ಮದುವೆಯಾಗಿತ್ತು ಎಂದು ತಿಳಿದುಬಂದಿದೆ.

ಇತ್ತೀಚಿನ ದಿನಗಳಲ್ಲಿ ಭಗವತ್ ಪಕ್ಕದ ಮನೆಯ ಯುವತಿಯೊಂದಿಗೆ ಆಪ್ತ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ ಸಂಜನಾಗೆ ಬಂದಿತ್ತು. ಈ ವಿಷಯವಾಗಿ ಪತಿ-ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರ ಮತ್ತೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದ್ದು, ಕೋಪಗೊಂಡ ಭಗವತ್ ಪತ್ನಿಯನ್ನು ಜೂನ್ 29ರಂದು ಕಾರಿನಲ್ಲಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾಲ್ಕಿ ತಾಲೂಕಿನ ಹೊನ್ನಿಕೇರಿ ಸಮೀಪದ ಗಾಯಮುಖ ದೇವಸ್ಥಾನದ ಬಳಿ ನಿರ್ಜನ ಪ್ರದೇಶದಲ್ಲಿ ಪತ್ನಿಯ ತಲೆ ಹಾಗೂ ಕತ್ತಿನ ಭಾಗಕ್ಕೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಂಜನಾಳನ್ನು ತಕ್ಷಣ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related News

error: Content is protected !!