ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ.
ಗಾಯಗೊಂಡಿರುವ ಯುವಕನನ್ನು ಕಂಚುಗಾರನಹಳ್ಳಿ ಗ್ರಾಮದ ಸಿದ್ದೇಶ್ ಎಂದು ಗುರುತಿಸಲಾಗಿದ್ದು, ದಾಳಿಯಲ್ಲಿ ಅವರ ಬಲಗೈಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಮೈಸೂರಿನ ಫಾರಂಹೌಸ್ನಲ್ಲಿ ಕೆಲಸ ಮಾಡುತ್ತಿದ್ದ ಸಿದ್ದೇಶ್ ಮತ್ತು ದಾಗಿನಕಟ್ಟೆ ಗ್ರಾಮದ ಲೀಲಾವತಿ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕುಟುಂಬದ ವಿರೋಧದ ನಡುವೆಯೂ ಜುಲೈ 1ರಂದು ಇಬ್ಬರೂ ವಿವಾಹವಾಗಿದ್ದರು.
ಇದಕ್ಕೂ ಮೊದಲು ಲೀಲಾವತಿ ನಾಪತ್ತೆಯಾಗಿರುವ ಕುರಿತು ಅವರ ಪೋಷಕರು ಜೂನ್ 30ರಂದು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿವಾಹದ ನಂತರ ತಮ್ಮ ಜೀವಕ್ಕೆ ಅಪಾಯವಿದೆ ಎಂದು ದಂಪತಿ ಜಿಲ್ಲಾ ಪೊಲೀಸ್ ಅಧಿಕಾರಿಗಳಲ್ಲಿ ರಕ್ಷಣೆ ಕೋರಿದ್ದರು. ಅಧಿಕಾರಿಗಳ ಸೂಚನೆಯಂತೆ ವಕೀಲರೊಂದಿಗೆ ಠಾಣೆಗೆ ಹಾಜರಾದ ವೇಳೆ, ಯುವತಿಯ ಸಂಬಂಧಿಕರು ಸಿದ್ದೇಶ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ದಾಳಿಯಿಂದ ತಪ್ಪಿಸಿಕೊಳ್ಳುವ ವೇಳೆ ಸಿದ್ದೇಶ್ ಅವರ ಬಲಗೈಗೆ ತೀವ್ರ ಗಾಯಗಳಾಗಿದ್ದು, ಪತಿಯನ್ನು ರಕ್ಷಿಸಲು ಮುಂದಾದ ಲೀಲಾವತಿ ಮೇಲೂ ಹಲ್ಲೆಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ದಾಳಿ ನಡೆಸಿದ ಆರೋಪದ ಮೇಲೆ ನಾಗರಾಜ ಎಂಬಾತನನ್ನು ಬಂಧಿಸಿದ್ದಾರೆ.
ಘಟನೆಯ ಬಳಿಕ ಮಾತನಾಡಿದ ಲೀಲಾವತಿ, “ನನಗೆ ಮತ್ತು ನನ್ನ ಪತಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು. ನಮ್ಮಿಬ್ಬರ ಕೊಲೆಗೆ ಯತ್ನಿಸಿದ ನಾಗರಾಜ ಹಾಗೂ ನನ್ನ ಅಣ್ಣ ಮಂಜುನಾಥ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
ಈ ಸಂಬಂಧ ನಾಗರಾಜ ಸೇರಿದಂತೆ ಯುವತಿಯ ಕಡೆಯವರ ವಿರುದ್ಧ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಮಾತನಾಡಿ, ಪ್ರೀತಿಸಿ ವಿವಾಹವಾಗಿದ್ದ ದಂಪತಿಯಿಂದ ಮಾಹಿತಿ ಪಡೆಯುತ್ತಿದ್ದ ಸಂದರ್ಭದಲ್ಲೇ ಯುವಕನ ಮೇಲೆ ಚಾಕು ದಾಳಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಮುನ್ನೆಚ್ಚರಿಕಾ ಕ್ರಮವಾಗಿ ಚನ್ನಗಿರಿ ತಾಲೂಕಿನ ಕಂಚುಗಾರನಹಳ್ಳಿ ಗ್ರಾಮದಲ್ಲಿ ಕೆಎಸ್ಆರ್ಪಿ ತುಕಡಿಯನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ದಾಳಿ ಮಾಡಿದವರ ವಿರುದ್ಧ ದೂರು ನೀಡದಂತೆ ಕೆಲ ಪೊಲೀಸ್ ಸಿಬ್ಬಂದಿ ಒತ್ತಡ ಹೇರಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಎಸ್ಪಿ, ಈ ವಿಚಾರದ ಬಗ್ಗೆ ಚನ್ನಗಿರಿ ಡಿವೈಎಸ್ಪಿ ಮೂಲಕ ತನಿಖೆ ನಡೆಸುವಂತೆ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…