ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ನಡೆಸಿದ ದಾಳಿಯಲ್ಲಿ ಮತ್ತೊಂದು ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಕೆಆರ್ಐಡಿಎಲ್ ಸಂಸ್ಥೆಯ ಸೂಪರಿಂಟೆಂಡೆಂಟ್ ಇಂಜಿನಿಯರ್ ಪ್ರವೀಣ್ ಶ್ರೀ ಹರಿ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿ, ನಗದು, ಚಿನ್ನ ಹಾಗೂ ಬೇನಾಮಿ ಆಸ್ತಿಗಳ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.
ದಾಳಿಯ ವೇಳೆ ಅಧಿಕಾರಿಗಳು ವಶಪಡಿಸಿಕೊಂಡ ದಾಖಲೆಗಳು ಮತ್ತು ಆಸ್ತಿಯ ಪ್ರಮಾಣ ತನಿಖಾಧಿಕಾರಿಗಳನ್ನೇ ಅಚ್ಚರಿಗೆ ದೂಡಿದೆ. ಆದಾಯಕ್ಕೆ ಮೀರಿದ ಆಸ್ತಿ ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಪತ್ತೆಯಾದ ಆಸ್ತಿಗಳ ಮೌಲ್ಯದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದರ ನಡುವೆ ಪ್ರವೀಣ್ ಶ್ರೀ ಹರಿ ಅವರು ಇತ್ತೀಚೆಗೆ ನಿರ್ಮಿಸಿದ್ದ ಐಷಾರಾಮಿ ಫಾರಂಹೌಸ್ ಕೂಡ ತನಿಖೆಯ ಕೇಂದ್ರಬಿಂದುವಾಗಿದೆ. ವಾರಾಂತ್ಯಗಳಲ್ಲಿ ಇಲ್ಲಿ ಭರ್ಜರಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು ಎಂಬ ಮಾಹಿತಿಯೂ ಕೇಳಿಬಂದಿದ್ದು, ತನಿಖೆಯ ಭಾಗವಾಗಿ ಸಂಬಂಧಿತ ಆಸ್ತಿಗಳನ್ನು ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ. ಪ್ರಕರಣದ ಕುರಿತು ಲೋಕಾಯುಕ್ತ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.
