
ಮೈಸೂರು ತಾಲೂಕಿನ ಭುಗತಗಳ್ಳಿ ಗ್ರಾಮದಲ್ಲಿ ನಡತೆ ಶಂಕೆಯಿಂದ ನಡೆದಿರುವ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಸಿದ್ದರಾಜು (64) ಎಂಬಾತ ತನ್ನೊಂದಿಗೆ ಸಹಜೀವನ ನಡೆಸುತ್ತಿದ್ದ ದೂರದ ಸಂಬಂಧಿ ಜ್ಯೋತಿ (40) ಅವರನ್ನು ಕೊಲೆಗೈದು ಪರಾರಿಯಾಗಿದ್ದಾನೆ.
ಮಾಹಿತಿಯ ಪ್ರಕಾರ, ಸಿದ್ದರಾಜು ಮತ್ತು ಜ್ಯೋತಿ ಒಂದು ವಾರದ ಹಿಂದಷ್ಟೇ ಭುಗತಗಳ್ಳಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಕ್ಕೆ ಬಂದಿದ್ದರು. ಈ ವೇಳೆ ಜ್ಯೋತಿಯ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಸಿದ್ದರಾಜು, ಇಬ್ಬರ ನಡುವೆ ಉಂಟಾದ ವಾಗ್ವಾದದ ವೇಳೆ ಆಕೆಯನ್ನು ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಘಟನೆಯ ಬಳಿಕ ಹಲವು ದಿನಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ, ಕೃತ್ಯದ ಬಗ್ಗೆ ಪಶ್ಚಾತ್ತಾಪಗೊಂಡು ಐದಾರು ದಿನಗಳ ನಂತರ ಸ್ವತಃ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.






