
ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ (ಎನ್ಎಚ್ಎಐ) ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಬಿ. ಅವರಿಗೆ ಸೇರಿದ 11 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಸುಮಾರು ₹12.95 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಹಚ್ಚಿದ್ದಾರೆ.
ಮಲ್ಲಿಕಾರ್ಜುನ ವಿರುದ್ಧ ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯ ಭಾಗವಾಗಿ ಬೆಂಗಳೂರಿನ ವಿವಿಧೆಡೆ ಇರುವ ಅವರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳು ಮತ್ತು ಆಸ್ತಿ ವಿವರಗಳನ್ನು ಪರಿಶೀಲಿಸಿದ್ದಾರೆ.
ದಾಳಿ ವೇಳೆ ಮಲ್ಲಿಕಾರ್ಜುನ ಹಾಗೂ ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ 100 ಎಕರೆ 5 ಗುಂಟೆ ಕೃಷಿ ಜಮೀನು ಹೊಂದಿರುವುದು ಪತ್ತೆಯಾಗಿದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.
ಅಧಿಕಾರಿಗಳ ಪ್ರಕಾರ, ಮಲ್ಲಿಕಾರ್ಜುನ ಅವರ ಒಟ್ಟಾರೆ ಆಸ್ತಿಯ ಮೌಲ್ಯ ಸುಮಾರು ₹18.33 ಕೋಟಿ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಎರಡು ಬಂಗಲೆಗಳು ಹಾಗೂ ಕೃಷಿ ಜಮೀನು ಸೇರಿದಂತೆ ಸುಮಾರು ₹14.28 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ. ಚಿನ್ನಾಭರಣ, ನಗದು, ಕಾರುಗಳು ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಸುಮಾರು ₹4.40 ಕೋಟಿ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ.
ಇದಲ್ಲದೆ, ಈವರೆಗೆ ಸುಮಾರು ₹1 ಕೋಟಿ ಮೌಲ್ಯದ ಬ್ಯಾಂಕ್ ಠೇವಣಿಗಳು ಪತ್ತೆಯಾಗಿವೆ. ಮಲ್ಲಿಕಾರ್ಜುನ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳು ಹಾಗೂ ಲಾಕರ್ಗಳ ಪರಿಶೀಲನೆ ಇನ್ನೂ ಮುಂದುವರಿದಿದ್ದು, ಹೆಚ್ಚಿನ ಆಸ್ತಿ ಮತ್ತು ಹಣಕಾಸು ವ್ಯವಹಾರಗಳ ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.






