ಹುಬ್ಬಳ್ಳಿ: ಇ-ಸ್ವತ್ತು ಮತ್ತು ಭೂ ದಾಖಲೆ ವರ್ಗಾವಣೆ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಹಾಗೂ ಅನಗತ್ಯ ವಿಳಂಬ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆ, ಲೋಕಾಯುಕ್ತ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ವಲಯ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಶುಕ್ರವಾರ ಬೆಳಗ್ಗೆ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಎಸ್.ಟಿ. ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ 12 ವಲಯ ಕಚೇರಿಗಳ ಮೇಲೂ ಏಕಕಾಲದಲ್ಲಿ ಪರಿಶೀಲನೆ ನಡೆಯಿತು. ಇದಕ್ಕಾಗಿ ಪ್ರತ್ಯೇಕ 12 ತಂಡಗಳನ್ನು ರಚಿಸಿ ದಾಖಲೆಗಳ ತಪಾಸಣೆ ನಡೆಸಲಾಗುತ್ತಿದೆ.

ಇ-ಸ್ವತ್ತುಗಾಗಿ ಲಂಚ ಆರೋಪ

ಇ-ಸ್ವತ್ತು ದಾಖಲೆಗಳನ್ನು ಮಾಡಿಕೊಡುವಲ್ಲಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪಗಳು ಸಾಕಷ್ಟು ದಿನಗಳಿಂದ ಕೇಳಿಬರುತ್ತಿದ್ದವು. “ಹಣ ಕೊಟ್ಟರೆ ಮಾತ್ರ ಕೆಲಸ ಆಗುತ್ತದೆ, ಇಲ್ಲವಾದರೆ ಕಡತಗಳನ್ನು ತಿಂಗಳುಗಳ ಕಾಲ ಬಾಕಿ ಇಡಲಾಗುತ್ತಿದೆ” ಎಂದು ಸಾರ್ವಜನಿಕರು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಚೇರಿಗಳಲ್ಲಿನ ದಾಖಲೆಗಳು, ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಹಾಗೂ ಇ-ಸ್ವತ್ತು ವರ್ಗಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ದಾಖಲೆಗಳ ಸ್ಕ್ಯಾನ್, ಸಿಬ್ಬಂದಿ ವಿಚಾರಣೆ

ಕಾರ್ಯಾಚರಣೆ ವೇಳೆ ಹಲವು ಮಹತ್ವದ ಕಡತಗಳು ಹಾಗೂ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಕೆಲ ಸಿಬ್ಬಂದಿಯಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ದೂರುಗಳಿಗೆ ಸಂಬಂಧಿಸಿದ ದಾಖಲೆಗಳ ಸತ್ಯಾಸತ್ಯತೆ ಪರಿಶೀಲನೆ ಮುಂದುವರಿದಿದೆ.

ಲೋಕಾಯುಕ್ತ ದಾಳಿಯಿಂದ ಪಾಲಿಕೆ ಕಚೇರಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರ ಗಮನ ಸೆಳೆದಿದೆ.

error: Content is protected !!