ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 1500ಕ್ಕೂ ಹೆಚ್ಚು ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ (ಲ್ಯಾಬ್ ಟೆಕ್ನಿಷಿಯನ್) ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರು ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಮತ್ತು ಮೂತ್ರ ಪರೀಕ್ಷೆಗಳಿಗಾಗಿ ಅಗತ್ಯವಿರುವ ಲ್ಯಾಬ್ ವ್ಯವಸ್ಥೆಗಳಿದ್ದರೂ, ತಂತ್ರಜ್ಞರ ಕೊರತೆ ಇರುವುದನ್ನು ಒತ್ತಿ ಹೇಳಿದರು.
ಈ ಹಿನ್ನೆಲೆ, ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಸ್ಪಷ್ಟಪಡಿಸಿದರು. ಜೊತೆಗೆ, ಪ್ರಯೋಗಾಲಯಗಳಲ್ಲಿ ಕೆಲಸ ಮಾಡುವ ತಂತ್ರಜ್ಞರ ವೇತನವನ್ನು ಕಾರ್ಮಿಕ ನಿಯಮಾವಳಿಗಳಿಗೆ ಅನುಗುಣವಾಗಿ ಪ್ರಸ್ತುತ ಇರುವ ₹18,225ರಿಂದ ₹25,000ರವರೆಗೆ ಹೆಚ್ಚಿಸುವ ಬಗ್ಗೆ ಗಮನ ಹರಿಸಲಾಗುವುದು ಎಂದರು.
