ಹಾಸನ: ಹಾಡುಹಗಲೇ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣವನ್ನು ಹಾಸನ ಗ್ರಾಮಾಂತರ ಪೊಲೀಸರು ಕೇವಲ ಒಂದೇ ದಿನದಲ್ಲಿ ಭೇದಿಸಿ, ಅಚ್ಚರಿಯ ತಿರುವು ನೀಡಿದ್ದಾರೆ. ಮನೆಯವರೇ ನಂಬಿದ್ದ ಸೊಸೆ ತನ್ನ ಪ್ರಿಯಕರನೊಂದಿಗೆ ಸೇರಿ ಕಳ್ಳತನ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಳುವಾಗಿದ್ದ ಸಂಪೂರ್ಣ ಚಿನ್ನಾಭರಣ ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ.
ಹಾಸನ ತಾಲೂಕಿನ ದೊಡ್ಡಹೊನ್ನೇನಹಳ್ಳಿ ಗ್ರಾಮದ ಕೇಶವೇಗೌಡ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಶನಿವಾರ ಬೆಳಿಗ್ಗೆ ಕೇಶವೇಗೌಡ, ಪತ್ನಿ ಜಯಲಕ್ಷ್ಮೀ ಹಾಗೂ ಪುತ್ರ ವೇಣುಗೋಪಾಲ್ ಜಮೀನಿಗೆ ಕೆಲಸಕ್ಕೆ ತೆರಳಿದ್ದರು. ಮಗನನ್ನು ಶಾಲಾ ಬಸ್ಗೆ ಕಳುಹಿಸಿದ ಬಳಿಕ ಮನೆಯಲ್ಲಿ ಒಬ್ಬಳೇ ಇದ್ದ ಸೊಸೆ ಅಮೃತಾ ತನ್ನ ಪ್ರಿಯಕರ ಪರಮೇಶ್ (ಅಲಿಯಾಸ್ ಚೇತನ್)ಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದಾಳೆ.
ನಂತರ ಇಬ್ಬರೂ ಸೇರಿ ಮನೆಯ ಬೀರುವಿನಲ್ಲಿದ್ದ ಸುಮಾರು ₹56.16 ಲಕ್ಷ ಮೌಲ್ಯದ 441.5 ಗ್ರಾಂ ಚಿನ್ನಾಭರಣ ಹಾಗೂ ₹13.40 ಲಕ್ಷ ನಗದನ್ನು ದೋಚಿದ್ದಾರೆ. ಕಳುವಿನ ಬಳಿಕ ಪರಮೇಶ್ ಹಣ ಮತ್ತು ಚಿನ್ನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದರೆ, ಅಮೃತಾ ಯಾವುದೇ ಅನುಮಾನ ಬಾರದಂತೆ ಮನೆಯ ಮುಂಭಾಗಿಲನ್ನು ತೆರೆದೆಯೇ ಬಿಟ್ಟು ಜಮೀನಿಗೆ ತೆರಳಿದ್ದಾಳೆ.
ಸಂಜೆ ಮನೆಗೆ ಹಿಂದಿರುಗಿದ ಕೇಶವೇಗೌಡ ಅವರಿಗೆ ಬೀರು ತೆರೆದಿರುವುದು ಹಾಗೂ ಚಿನ್ನ-ಹಣ ಕಳುವಾಗಿರುವುದು ಗೊತ್ತಾಗಿದೆ. ಈ ವೇಳೆ ಅಮೃತಾ ತನಗೆ ಏನೂ ತಿಳಿದಿಲ್ಲ ಎಂಬಂತೆ ವರ್ತಿಸಿ ಕಳ್ಳತನ ನಡೆದಿದೆ ಎಂದು ನಾಟಕವಾಡಿದ್ದಾಳೆ.
ಪ್ರಕರಣ ದಾಖಲಿಸಿಕೊಂಡ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿದ್ದಾರೆ. ವಿಚಾರಣೆ ವೇಳೆ ಅಮೃತಾಳ ವರ್ತನೆ ಅನುಮಾನಕ್ಕೆ ಕಾರಣವಾಗಿದ್ದು, ತೀವ್ರ ವಿಚಾರಣೆ ನಡೆಸಿದಾಗ ಆಕೆ ತನ್ನ ಪ್ರಿಯಕರನೊಂದಿಗೆ ಸೇರಿ ಕಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾಳೆ. ಕೆ. ಹಿರೀಹಳ್ಳಿ ಗ್ರಾಮದ ನಿವಾಸಿಗಳಾದ ಅಮೃತಾ ಮತ್ತು ಪರಮೇಶ್ ಹಲವು ವರ್ಷಗಳಿಂದ ಪರಿಚಯ ಹೊಂದಿದ್ದು, ಪೂರ್ವಯೋಜಿತವಾಗಿ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಪ್ರಕರಣ ನಡೆದ ಕೇವಲ ಒಂದೇ ದಿನದಲ್ಲಿ ಆರೋಪಿಗಳಿಬ್ಬರನ್ನೂ ಬಂಧಿಸಿರುವ ಹಾಸನ ಗ್ರಾಮಾಂತರ ಪೊಲೀಸರು ಕಳುವಾಗಿದ್ದ ಚಿನ್ನಾಭರಣ ಹಾಗೂ ನಗದನ್ನು ಸಂಪೂರ್ಣವಾಗಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
