ಪೋಕ್ಸೊ ಪ್ರಕರಣದ ಆರೋಪಿಯೊಬ್ಬ ಪೊಲೀಸ್ ಠಾಣೆಯಿಂದಲೇ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯ PSI ಸೋಮಲಿಂಗ ಒಡೆಯರ್ ಅವರನ್ನು ಅಮಾನತುಗೊಳಿಸಲಾಗಿದೆ.
ಕರ್ತವ್ಯ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಡ್ಡೂರು ಶ್ರೀನಿವಾಸಲು ಅಮಾನತು ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣ ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಆರೋಪಿಯ ಪರಾರಿಯ ನಂತರ ತನಿಖೆ ಮತ್ತು ಇಲಾಖಾ ಕ್ರಮಗಳನ್ನು ಗಂಭೀರವಾಗಿ ಕೈಗೊಳ್ಳಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಮೂವರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಲಾಗಿತ್ತು.
ಇದೀಗ ಠಾಣೆಯ ಜವಾಬ್ದಾರಿ ಅಧಿಕಾರಿಯಾಗಿದ್ದ PSI ಸೋಮಲಿಂಗ ಒಡೆಯರ್ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆಯೊಳಗಿನ ನಿರ್ಲಕ್ಷ್ಯಕ್ಕೆ ಕಟ್ಟುನಿಟ್ಟಿನ ಸಂದೇಶ ನೀಡಲಾಗಿದೆ.
ಪೋಕ್ಸೊ ಆರೋಪಿಯ ಪರಾರಿ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಇನ್ನಷ್ಟು ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
