ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರನಗರದ 20ನೇ ಕ್ರಾಸ್ ಬಳಿ ಇರುವ ಅಪಾರ್ಟ್ಮೆಂಟ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮಾನವ ಕಳ್ಳಸಾಗಣೆಗಾಗಿ ಬಳಸಲಾಗುತ್ತಿದ್ದ ಮಹಿಳೆಯೊಬ್ಬರನ್ನು ರಕ್ಷಿಸಲಾಗಿದೆ.
ಬಂಧಿತನನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಜಳವಳ್ಳಿ ಗ್ರಾಮದ ನಿವಾಸಿ ಗಣೇಶ್ ಗಣಪ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಅಪಾರ್ಟ್ಮೆಂಟ್ನ ಮೊದಲ ಮಹಡಿಯ ರೂಮ್ ಸಂಖ್ಯೆ 103ರಲ್ಲಿ ಮಹಿಳೆಯನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ಬಳಸುತ್ತಿದ್ದು, ಅಕ್ರಮ ಲಾಭಕ್ಕಾಗಿ ಈ ಕಾರ್ಯಚಟುವಟಿಕೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮಾನವ ಕಳ್ಳಸಾಗಣೆ ಮತ್ತು ಅಕ್ರಮ ವೇಶ್ಯಾವಾಟಿಕೆ ತಡೆ ಕಾಯ್ದೆಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
