ಗದಗ: ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್ ಪೇದೆಯೊಬ್ಬರು ನೇಣಿಗೆ ಶರಣಾಗಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹನುಮನಾಳ ಗ್ರಾಮದ ಪ್ರಶಾಂತ ಕಂಚೇರಿ (33) ಎಂದು ಗುರುತಿಸಲಾಗಿದೆ. ಅವರು 2012ರ ಬ್ಯಾಚ್‌ನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (DSRP) ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಇತ್ತೀಚೆಗೆ (ASC) ಬಾಂಬ್ ನಿಷ್ಕ್ರಿಯ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಅನಿರೀಕ್ಷಿತ ನಿರ್ಧಾರ

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ಪ್ರಶಾಂತ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ರಿಯಾಶೀಲ ಪೊಲೀಸ್ ಸಿಬ್ಬಂದಿಯಾಗಿದ್ದ ಅವರು ಈ ರೀತಿ ಸಾವಿಗೆ ಶರಣಾಗಿರುವುದು ಸಹೋದ್ಯೋಗಿಗಳು ಮತ್ತು ಸ್ನೇಹಿತರನ್ನು ಮರುಗುಗೊಳಿಸಿದೆ.

ಪೊಲೀಸ್ ಇಲಾಖೆಯಲ್ಲಿ ಶೋಕದ ಛಾಯೆ

ಈ ದುಃಖದ ಘಟನೆಗೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಸಶಸ್ತ್ರ ಮೀಸಲು ಪಡೆಯ ಹಿರಿಯ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಪತ್ನಿ ಹಾಗೂ ಮಗುವನ್ನು ಅಗಲಿರುವ ಪ್ರಶಾಂತ ಅವರ ನಿಧನದಿಂದ ಕುಟುಂಬದವರೂ ಆಘಾತಕ್ಕೊಳಗಾಗಿದ್ದಾರೆ.

ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

error: Content is protected !!