
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಓಂ ಪ್ರಕಾಶ್ (68) ಭೀಕರವಾಗಿ ಹತ್ಯೆಗೀಡಾಗಿರುವ ಘಟನೆ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನಲ್ಲಿ ಬೆಳಕಿಗೆ ಬಂದಿದೆ. ತಮ್ಮ ನಿವಾಸದಲ್ಲಿ ಅವರು ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ಈ ಘಟನೆಯ ಹಿಂದೆ ಪತ್ನಿಯೇ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮೂಲಗಳಿಂದ ಲಭ್ಯವಾದ ಪ್ರಾಥಮಿಕ ಮಾಹಿತಿಯಂತೆ, ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಹತ್ಯೆ ನಡೆಸಿದ ನಂತರಲೇ ಪೊಲೀಸರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಐಪಿಎಸ್ ಸೇವಾ ಪಯಣ
1981ರ ಬ್ಯಾಚ್ನ ಐಪಿಎಸ್ ಅಧಿಕಾರಿ ಓಂ ಪ್ರಕಾಶ್, ವಿವಿಧ ಮಹತ್ವದ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅವರು 2015ರ ಮಾರ್ಚ್ 1ರಂದು ರಾಜ್ಯದ 38ನೇ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೇ ದಿನ, ನಿವೃತ್ತ ಡಿಜಿ ಲಾಲ್ರೋಖುಮಾ ಪಚುವಾ ಅವರಿಂದ ಬೆಂಗಳೂರಿನ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದರು.
ಅಧಿಕಾರಿ ಜೀವನದ ಪ್ರಾರಂಭದಲ್ಲಿ ಬಳ್ಳಾರಿಯ ಹರಪನಹಳ್ಳಿ ಉಪವಿಭಾಗದ ಎಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದ ಅವರು, ಬಳಿಕ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಎಸ್ಪಿಯಾಗಿಯೂ ಸೇವೆ ಸಲ್ಲಿಸಿದರು. ಕರ್ನಾಟಕ ಲೋಕಾಯುಕ್ತ ಮತ್ತು ರಾಜ್ಯ ಜಾಗೃತ ಆಯೋಗದಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು.
ಬಿಹಾರದ ಚಂಪಾರಣ್ ಮೂಲದವರು
ಬಿಹಾರದ ಚಂಪಾರಣ್ ಜಿಲ್ಲೆಯಲ್ಲಿ ಜನಿಸಿದ ಓಂ ಪ್ರಕಾಶ್, ತಮ್ಮ ವೃತ್ತಿ ಜೀವನದ ಹೆಚ್ಚಿನ ಸಮಯವನ್ನು ಕರ್ನಾಟಕದಲ್ಲಿ ಕಳೆದಿದ್ದರು. ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿ ಅವರು ಉನ್ನತ ಮಟ್ಟದ ಕಾರ್ಯಗಳನ್ನು ನಿರ್ವಹಿಸಿದ್ದರು.
ಈ ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದ್ದು, ಪೊಲೀಸರ ತನಿಖೆ ಮುಂದುವರೆದಿದೆ.