ಶಿರಸಿ: ಮೇ 24ರ ನಸುಕಿನ ಜಾವ ಸುರಿದ ಭಾರೀ ಮಳೆಯಿಂದ ನಗರದ ಗಣೇಶನಗರ ಎರಡನೇ ವಾರ್ಡ್ನಲ್ಲಿ ರಸ್ತೆ ಸಂಪೂರ್ಣ ಕುಸಿದು ಹೋಗಿರುವ ಘಟನೆ ನಡೆದಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಅವಾಂತರಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೇವಲ ಎರಡು ತಿಂಗಳ ಹಿಂದಷ್ಟೇ ಇಲ್ಲಿ ತಡೆಗೋಡೆ ನಿರ್ಮಿಸಿ ರಸ್ತೆ ಮೇಲೆ ಮಣ್ಣು ಹಾಕಿ ಕಾಮಗಾರಿ ನಡೆಸಲಾಗಿತ್ತು. ಆದರೆ, ಕಳಪೆ ಮಟ್ಟದ ಕಾಮಗಾರಿ ಮತ್ತು ನೀರು ಹರಿಯುವ ವ್ಯವಸ್ಥೆಯ ಕೊರತೆಯಿಂದ ಮಳೆಯ ನೀರಿನ ಒತ್ತಡ ತಡೆಯಲಾಗದೇ ರಸ್ತೆ ಕೊಚ್ಚಿ ಹೋಗಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ಕುಸಿತದ ಪರಿಣಾಮವಾಗಿ ಅಲ್ಲಿದ್ದ ಒಮಿನಿ ಕಾರೊಂದು ಮಣ್ಣಿನಲ್ಲಿ ಸಿಲುಕಿಕೊಂಡಿದ್ದು, ಹಲವಾರು ಮನೆಗಳ ಸಂಪರ್ಕ ಕಡಿತಗೊಂಡಿದೆ. ನಿವಾಸಿಗಳು ಮನೆಯಿಂದ ಹೊರಬರಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನೊಂದೆಡೆ, ನಿರ್ಮಿಸಿರುವ ತಡೆಗೋಡೆ ಕೂಡ ಕುಸಿಯುವ ಭೀತಿ ಎದುರಾಗಿದ್ದು, ಪಕ್ಕದ ಮನೆಗಳ ಸುರಕ್ಷತೆ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ತಕ್ಷಣ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
