ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿರುವ ನಾಡಕಚೇರಿಯಲ್ಲಿ ಕಳೆದ ಎರಡು ವಾರಗಳಿಂದ ಸರ್ವರ್ ಸಮಸ್ಯೆ ಮುಂದುವರಿದಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜಾತಿ, ಆದಾಯ, ನಿವಾಸಿ, ಉತ್ತರಾಧಿಕಾರ ಸೇರಿದಂತೆ ವಿವಿಧ ಪ್ರಮಾಣ ಪತ್ರಗಳಿಗಾಗಿ ಅರ್ಜಿ ಸಲ್ಲಿಸಲು ಆಗಮಿಸುವ ವಿದ್ಯಾರ್ಥಿಗಳು, ಪೋಷಕರು, ವೃದ್ಧರು ಹಾಗೂ ಇತರೆ ನಾಗರಿಕರು ಪ್ರತಿದಿನ ಕಚೇರಿಗೆ ಅಲೆದಾಡುವಂತಾಗಿದೆ.

ನಾಡಕಚೇರಿಯ ವೆಬ್‌ಸೈಟ್ ಮತ್ತು ಸರ್ವರ್ ಕಾರ್ಯನಿರ್ವಹಿಸದ ಕಾರಣ ಆನ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಪರಿಣಾಮ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಹಾಗೂ ಶಾಲೆ-ಕಾಲೇಜುಗಳ ಪ್ರವೇಶಕ್ಕೆ ಅಗತ್ಯವಾಗಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆಯುವುದು ಸಾರ್ವಜನಿಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಶಾಲಾ-ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕೆ ಜೊತೆಯಾಗಿ ಆಗಾಗ್ಗೆ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯವೂ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಗಂಟೆಗಟ್ಟಲೆ ಸರದಿಯಲ್ಲಿ ನಿಂತರೂ ಕೆಲಸವಾಗದೆ ಸಾರ್ವಜನಿಕರು ನಿರಾಶರಾಗಿ ಹಿಂದಿರುಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿದಿನ ನೂರಾರು ಮಂದಿ ಪ್ರಮಾಣ ಪತ್ರಗಳಿಗಾಗಿ ಕಚೇರಿಗೆ ಆಗಮಿಸುತ್ತಿದ್ದರೂ, ತಾಂತ್ರಿಕ ದೋಷದಿಂದಾಗಿ ಸೇವೆಗಳು ಸ್ಥಗಿತಗೊಂಡಿವೆ. ಇದರಿಂದ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸಮಸ್ಯೆಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ಸೇವೆಗಳು ಜನರ ಮನೆಬಾಗಿಲಿಗೆ ತಲುಪಬೇಕು ಎಂಬ ಉದ್ದೇಶವಿದ್ದರೂ, ಮೂಲಭೂತ ತಾಂತ್ರಿಕ ವ್ಯವಸ್ಥೆಯ ವೈಫಲ್ಯದಿಂದ ಜನರು ಕಚೇರಿಗಳಿಗೆ ಅಲೆದಾಡಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ವಿಪರ್ಯಾಸವಾಗಿದೆ.

ಸಂಬಂಧಪಟ್ಟ ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ನಾಡಕಚೇರಿಯ ಸರ್ವರ್ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿ, ಜಾತಿ, ಆದಾಯ, ನಿವಾಸಿ ಹಾಗೂ ಇತರೆ ಪ್ರಮಾಣ ಪತ್ರಗಳು ಸಾರ್ವಜನಿಕರಿಗೆ ಯಾವುದೇ ವಿಳಂಬವಿಲ್ಲದೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ: ಶಿವರಾಜ್ ಪಿ.ಆರ್.

Related News

error: Content is protected !!