ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೊಮ್ಮೆ ಸುದ್ದಿ ಎಳೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಮತ್ತೊಂದು ವಿಡಿಯೋವನ್ನು ಪ್ರಕಟಿಸಿದ ಆರೋಪದ ಮೇಲೆ “ದೂತ” ಎಂಬ ಯೂಟ್ಯೂಬ್ ಚಾನೆಲ್‌ನ ಸಮೀರ್ ಎಂಡಿ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲೆಯಾಗಿದೆ.

ಈ ಮಾನನಷ್ಟ ಮೊಕದ್ದಮೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಅವರು ಸಲ್ಲಿಸಿದ್ದು, ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ನೀಡಲಾಗಿದೆ. ನ್ಯಾಯಾಧೀಶ ಎಸ್. ನಟರಾಜ್ ಅವರು ಸಮೀರ್ ಎಂಡಿಗೆ ನೋಟಿಸ್ ಜಾರಿ ಮಾಡಿ ನ್ಯಾಯಾಲಯದಲ್ಲಿ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ, ತಕ್ಷಣವೇ ವಿವಾದಿತ ಎರಡನೆ ವಿಡಿಯೋವನ್ನು ಡಿಲೀಟ್ ಮಾಡುವಂತೆ ಆದೇಶಿಸಿದ್ದಾರೆ.

ಈ ಹಿಂದೆ ಸೌಜನ್ಯಾ ಪ್ರಕರಣ ಸಂಬಂಧ ಧರ್ಮಸ್ಥಳ ಸಂಸ್ಥೆಯನ್ನು ನೇರವಾಗಿ ಗುರಿಯಾಗಿಸಿಕೊಂಡು ಸಮೀರ್ ಎಂಡಿ ಬಿಡುಗಡೆ ಮಾಡಿದ ಮೊದಲನೆಯ ವಿಡಿಯೋಕ್ಕೂ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಆದರೆ, ಆ ಆದೇಶವನ್ನು ಪರಿಗಣಿಸದೇ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿರುವುದು ನ್ಯಾಯಾಲಯದ ಆಕ್ರೋಶಕ್ಕೆ ಕಾರಣವಾಗಿದೆ.

ಧರ್ಮಸ್ಥಳದ ಪರವಾಗಿ ಕಾನೂನು ಹೋರಾಟಕ್ಕೆ ಇಳಿದಿರುವ ಅರ್ಜಿದಾರರು, ಇಂತಹ ವಿಡಿಯೋಗಳು ಧರ್ಮಸ್ಥಳ ಸಂಸ್ಥೆಯ ಮಾನಮರ್ಯಾದೆಗೆ ಹಾನಿ ತರುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆ 10 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದ್ದು, ಪ್ರಕರಣ ಇದೀಗ ಹೆಚ್ಚಿದ ಕುತೂಹಲದ ಕೇಂದ್ರಬಿಂದು ಆಗಿದೆ.

Related News

error: Content is protected !!