ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ ಎಂದು ಪರಿಗಣಿಸಲಾಗಿದ್ದ ಈ ಪ್ರಕರಣದಲ್ಲಿ, ಇದೀಗ ಅತ್ಯಾಚಾರ ಯತ್ನದ ಬಳಿಕ ಕೊಲೆ ನಡೆದಿರುವ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ. ಈ ಸಂಬಂಧ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೃತ ಯುವತಿ ಮಂಡ್ಯ ನಗರದ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಖಾಸಗಿ ಪಿಜಿಯಲ್ಲಿ ವಾಸವಾಗಿದ್ದರು. ಘಟನೆ ನಡೆದ ದಿನ ಮನೆಗೆ ತೆರಳುವುದಾಗಿ ತಿಳಿಸಿದ್ದ ಆಕೆ, ಸ್ನೇಹಿತರಾದ ಅಶ್ವಿನಿ, ವಿಷ್ಣು ಹಾಗೂ ಶಿವಕುಮಾರ್ ಅವರೊಂದಿಗೆ ಕಾರಿನಲ್ಲಿ ಕೊಮ್ಮೇರಹಳ್ಳಿ ಬೆಟ್ಟದ ಪ್ರದೇಶಕ್ಕೆ ತೆರಳಿದ್ದರು ಎನ್ನಲಾಗಿದೆ.

ಈ ವೇಳೆ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಆರಂಭದಲ್ಲಿ ಮಾಹಿತಿ ನೀಡಲಾಗಿತ್ತು. ಕಾರಿನಲ್ಲಿದ್ದ ಉಳಿದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.

ಆದರೆ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಘಟನೆ ನಡೆದ ಹಲವು ಗಂಟೆಗಳ ಬಳಿಕವೇ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಈ ವಿಳಂಬವೇ ಪ್ರಕರಣದ ಬಗ್ಗೆ ಅನುಮಾನಗಳಿಗೆ ಕಾರಣವಾಗಿದೆ.

ಮೃತಳ ತಾಯಿ ನೀಡಿರುವ ದೂರಿನ ಪ್ರಕಾರ, ಹುಟ್ಟುಹಬ್ಬ ಆಚರಣೆಯ ನೆಪದಲ್ಲಿ ಯುವತಿಯನ್ನು ಹೊರಗೆ ಕರೆದುಕೊಂಡು ಹೋಗಿದ್ದ ಸ್ನೇಹಿತರು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದಾಗ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರು ಅಪಘಾತದಂತೆ ಬಿಂಬಿಸಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಮೃತ ಯುವತಿ ಹಾಗೂ ಮತ್ತೊಬ್ಬ ಯುವತಿ ಒಂದೇ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿದ್ದ ಇಬ್ಬರು ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದು, ಹುಟ್ಟುಹಬ್ಬ ಆಚರಣೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಸದ್ಯ ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ಮೂವರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ, ವಿಧಿವಿಜ್ಞಾನ ಸಾಕ್ಷ್ಯಗಳು ಹಾಗೂ ತನಿಖೆಯಿಂದ ಲಭ್ಯವಾಗುವ ಇತರೆ ಮಾಹಿತಿಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

Related News

error: Content is protected !!