
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಇಟಗಿ ಕ್ರಾಸ್, ಎನ್ಎಚ್-4 ರಲ್ಲಿ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಅತೀ ವೇಗದಲ್ಲಿ ಬಂದ ಆಯಿಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಯ ಅಂಚಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ನುಗ್ಗಿದ ಪರಿಣಾಮ, ರಾಮಚಂದ್ರ ಜಾಧವ್ (45), ಮಹೇಶ್ ಜಾಧವ್ (18), ಹಾಗೂ ರಾಮಣ್ಣ ಅಲಿಯಾಸ್ ರಮೇಶ್ (38) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ತೀವ್ರತೆಗೆ ಶಾಕ್ಗೆ ಒಳಗಾದ ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿದರು. ಗಾಯಾಳುಗಳನ್ನು ಹೆದ್ದಾರಿ ಪೆಟ್ರೋಲ್ ಸಿಬ್ಬಂದಿಯ ನೆರವಿನಿಂದ ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ದೊರೆತ ಬೆನ್ನಲ್ಲೇ ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದಿದ್ದು, ಕ್ರೇನ್ ಸಹಾಯದಿಂದ ಟ್ಯಾಂಕರ್ ತೆರವುಗೊಳಿಸಲಾಯಿತು. ಈ ಸಂದರ್ಭ ರಸ್ತೆ ಮೇಲೆ ಕೆಲ ಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.
ಸ್ಥಳೀಯರು ವಾಹನಚಾಲಕರ ಅಜಾಗರೂಕತೆಯನ್ನು ಘಟನೆಗೆ ಕಾರಣವೆಂದು ಆರೋಪಿಸುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.