ರಾಮನಗರ/ಚನ್ನಪಟ್ಟಣ: ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಪರಿಚಯವು ಸರ್ಕಾರಿ ಅಧಿಕಾರಿಯೊಬ್ಬರ ಜೀವನದಲ್ಲಿ ಆಘಾತಕಾರಿ ಘಟನೆಯಾಗಿ ಪರಿಣಮಿಸಿದೆ. ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್. ಗಿರೀಶ್ ಅವರ ಸರ್ಕಾರಿ ನಿವಾಸದಲ್ಲೇ ಅಸಹಜ ಲೈಂಗಿಕ ದೌರ್ಜನ್ಯ, ದರೋಡೆ ಹಾಗೂ ಕೊಲೆ ಯತ್ನ ನಡೆದಿರುವ ಆರೋಪದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ದೂರಿನ ಪ್ರಕಾರ, ಮೈಸೂರು ಮೂಲದ ಅನುಶ್ ಎಂಬಾತನಿಗೆ ತಹಶೀಲ್ದಾರ್ ಅವರೊಂದಿಗೆ ಫೇಸ್ಬುಕ್ ಮೂಲಕ ಪರಿಚಯವಾಗಿತ್ತು. ಜೂನ್ 28ರಂದು ಅನುಶ್ ತನ್ನ ಸ್ನೇಹಿತರಾದ ಶೋಭರಾಜನ್ ಹಾಗೂ ನವೀನ್ ಅವರೊಂದಿಗೆ ಚನ್ನಪಟ್ಟಣದ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ್ದಾನೆ. ಅತಿಥಿಗಳೆಂದು ನಂಬಿ ಮನೆಗೆ ಆಹ್ವಾನಿಸಿದ್ದ ತಹಶೀಲ್ದಾರ್ ಅವರಿಗೆ, ಬಳಿಕ ಆರೋಪಿಗಳು ನೀಡಿದ ಜ್ಯೂಸ್ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧಿ ಬೆರೆಸಿದ್ದರು ಎನ್ನಲಾಗಿದೆ. ಪ್ರಜ್ಞೆ ಕಳೆದುಕೊಂಡ ನಂತರ ತಹಶೀಲ್ದಾರ್ ಅವರ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಇದಲ್ಲದೆ, ತಹಶೀಲ್ದಾರ್ ಅವರ ಮೈಮೇಲಿದ್ದ ಚಿನ್ನದ ಸರ ಹಾಗೂ ಉಂಗುರಗಳನ್ನು ಕಳವು ಮಾಡಿರುವ ಆರೋಪಿಗಳು, ₹10 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಣ ನೀಡಲು ನಿರಾಕರಿಸಿದ ಬಳಿಕ ಕೊಲೆ ಮಾಡಲು ಸಹ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯಿಂದ ತಹಶೀಲ್ದಾರ್ ದೈಹಿಕ ಹಾಗೂ ಮಾನಸಿಕವಾಗಿ ತೀವ್ರ ಆಘಾತಕ್ಕೊಳಗಾಗಿದ್ದಾರೆ ಎನ್ನಲಾಗಿದೆ.
ತಹಶೀಲ್ದಾರ್ ನೀಡಿದ ದೂರಿನ ಮೇರೆಗೆ ಚನ್ನಪಟ್ಟಣ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಮುಖ ಆರೋಪಿ ಅನುಶ್ನನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಾದ ಶೋಭರಾಜನ್ ಮತ್ತು ನವೀನ್ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ವಿಶೇಷ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.
ಈ ಪ್ರಕರಣವು ಸರ್ಕಾರಿ ಅಧಿಕಾರಿಯೊಬ್ಬರ ನಿವಾಸದಲ್ಲೇ ನಡೆದಿರುವುದರಿಂದ ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಪ್ರಕರಣದ ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
