ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ವಾಕಿಂಗ್‌ಗೆ ಬಂದಿದ್ದ ಗ್ರಾಮಸ್ಥರು ದೇವಸ್ಥಾನದ ಸುತ್ತಮುತ್ತ ಸಂಚರಿಸುತ್ತಿದ್ದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.

ಸುದ್ದಿ ತಿಳಿದ ತಕ್ಷಣ ಕೊರಟಗೆರೆ ತಹಶೀಲ್ದಾರರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಸ್ಥಾನದ ಕಬ್ಬಿಣದ ಬಾಗಿಲನ್ನು ಗ್ಯಾಸ್ ಕಟರ್ ಬಳಸಿ ಕತ್ತರಿಸಿ ಒಳನುಗ್ಗಿದ ದುಷ್ಕರ್ಮಿಗಳು ದೇವಿಯ ಅಲಂಕಾರಕ್ಕೆ ಬಳಸುತ್ತಿದ್ದ ಚಿನ್ನದ ಕಣ್ಣು, ಮಾಂಗಲ್ಯ ಹಾಗೂ ಸುಮಾರು 25ರಿಂದ 30 ಕೆಜಿ ತೂಕದ ಬೆಳ್ಳಿ ವಸ್ತುಗಳನ್ನು ಕದ್ದೊಯ್ದಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.

ವಡ್ಡಗೆರೆ ವೀರನಾಗಮ್ಮ ದೇವಸ್ಥಾನವು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಕ್ತರ ನಂಬಿಕೆಯ ಕೇಂದ್ರವಾಗಿದ್ದು, ಪ್ರತಿವರ್ಷ ಯುಗಾದಿ ಹಬ್ಬದ ಸಂದರ್ಭದಲ್ಲಿ ಇಲ್ಲಿ ಮೂರು ದಿನಗಳ ಕಾಲ ಭವ್ಯ ಜಾತ್ರೆ ನಡೆಯುತ್ತದೆ. ಈ ಜಾತ್ರೆಗೆ ಸುತ್ತಮುತ್ತಲಿನ ಗ್ರಾಮಗಳಷ್ಟೇ ಅಲ್ಲದೆ ಹೊರರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಾರೆ.

ಯುಗಾದಿ ಹಬ್ಬ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವುದು ಗ್ರಾಮಸ್ಥರು ಹಾಗೂ ಭಕ್ತರಲ್ಲಿ ತೀವ್ರ ಆತಂಕ ಮತ್ತು ನೋವನ್ನುಂಟು ಮಾಡಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

error: Content is protected !!